ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್ನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರ ವಿಫಲವಾಗಿರುವ ಕಾರಣ ಗೋಹತ್ಯೆ ತಡೆ ನಿಷೇಧ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.
ಕರ್ನಾಟಕ ಭೂ ಸುಧಾರಣಾ ಮಸೂದೆ 2020 ಅನ್ನು ಪರಿಷತ್ತಿನಲ್ಲಿ ಅಂಗೀಕರಿಸುವಲ್ಲಿ ಸರ್ಕಾರವನ್ನು ಬೆಂಬಲಿಸಿದ್ದ ಜೆಡಿಎಸ್, ಪರಿಷತ್ತಿನ ಅಧ್ಯಕ್ಷರನ್ನು ಕೆಳಗಿಳಿಸುವ ಆಡಳಿತ ಪಕ್ಷದ ಪ್ರಯತ್ನಗಳಿಗೆ ತನ್ನ ಬೆಂಬಲವನ್ನು ವಿಸ್ತರಿಸಿದೆ, ಆದರೆ ಗೋಹತ್ಯೆ ನಿಷೇಧ ಮಸೂದೆಗೆ ಬೆಂಬಲ ನೀಡುವುದಿಲ್ಲ ಎಂಬುದನ್ನು ಜೆಡಿಎಸ್ ಸ್ಪಷ್ಟಪಡಿಸಿದೆ.
ಹಸು, ಕರು ಮತ್ತು ಎಮ್ಮೆ ಸೇರಿದಂತೆ ದನಗಳನ್ನು ಅಕ್ರಮವಾಗಿ ಮಾರಾಟ ಮಾಡುವುದು, ಖರೀದಿಸುವುದು ಮತ್ತು ಸಾಗಿಸುವುದನ್ನು ನಿಷೇಧಿಸುವ ಮಸೂದೆಯನ್ನು ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು ಮತ್ತು ಇದನ್ನು ಮಂಗಳವಾರ ಪರಿಷತ್ತಿನಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಮಂಡಿಸಿದರು.
ಇದು ಪರಿಷತ್ ನಲ್ಲಿ ಮಂಡಿಸುವ ಕಾರ್ಯಸೂಚಿಯ ಭಾಗವಾಗಿತ್ತು ಆದರೆ ಸದನವನ್ನು ಮುಂದೂಡಲಾಯಿತು. ಹಿಂದಿನ ದಿನ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ (ಕೌನ್ಸಿಲ್ ಮುಂದೂಡುವ ಮೊದಲು), ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರು ಮಸೂದೆಯನ್ನು ವಿರೋಧಿಸುವ ಬಗ್ಗೆ ತಮ್ಮ ಪಕ್ಷದ ನಿಲುವನ್ನು ಪುನರುಚ್ಚರಿಸಿದರು. ಈ ಮಸೂದೆ ಜಾರಿಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎಂದರು. ಕರ್ನಾಟಕ ಗೋ ಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಈಗಾಗಲೇ ಜಾರಿಯಲ್ಲಿದೆ ಮತ್ತು ಅದನ್ನು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸಲು ಇದು ನಿಬಂಧನೆಗಳನ್ನು ಹೊಂದಿದೆ ಎಂದು ದೇವೇಗೌಡ ಹೇಳಿದ್ದಾರೆ.
Advertisement