ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭವಾಗುತ್ತಿದ್ದು, ಇಡೀ ವಿಶ್ವದ ನಿದ್ದೆಗೆಡಿಸಿರುವ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ಅನುಸರಿಸಬೇಕಾದ ಸುರಕ್ಷತೆಗಳ ಬಗ್ಗೆ ಮಕ್ಕಳಿಗೆ ಮೊದಲ 1 ಗಂಟೆಗಳ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ.
10 ಮತ್ತು 12ನೇ ತರಗತಿ ಮಕ್ಕಳಿಕೆ ಕೊರೋನಾ ವೈರಸ್ ಕುರಿತು ಜಾಗೃತೆ ಮೂಡಿಸುವಂತೆ ಇಲಾಖೆಯು ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧಾರಣೆ, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳೇ ಇರುವುದು ಕೈಗಳನ್ನು ಸ್ವಚ್ಛತೆಯಿಂದ ಇರಿಸಿಕೊಳ್ಳುವ ಕುರಿತಂತೆ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದೆ ಎಂದು ವರದಿಗಳಿಂದ ತಿಳಿಬಂದಿದೆ.
ಅಲ್ಲದೆ, ಮಕ್ಕಳ ದೈಹಿಕ ಚಲನವಲನ ಹಾಗೂ ಮಾನಸಿಕ ಆರೋಗ್ಯದ ಕುರಿತಂತೆಯೂ ಗಮನ ಹರಿಸುವಂತೆ ತಿಳಿಸಲಾಗಿದೆ ಎನ್ನಲಾಗುತ್ತಿದೆ.
ಶಾಲೆಗಳಲ್ಲಿ ಮಕ್ಕಳಿಗೆ ಬೋಧನೆ ಮಾಡುವ ಶಿಕ್ಷಕರು ಸದಾಕಾಲ ಮಾಸ್ಕ್ ಧಾರಣೆ ಮಾಡಬೇಕಿದೆ. 50 ವರ್ಷಕ್ಕಿಂತ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಶಾಲೆ, ಕಾಲೇಜುಗಳ ಆರಂಭಕ್ಕೆ ಇನ್ನೊಂದು ದಿನ ಮಾತ್ರವೇ ಬಾಕಿ ಇರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬೆಂಗಳೂರಿನ ವಿವಿಧ ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿದ ಸುರೇಶ್ ಕುಮಾರ್ ಅವರು ಸುರಕ್ಷತಾ ಕ್ರಮಗಳ ಪರಿಶೀಲನೆ ನಡೆಸಿದರು.
Advertisement