ತುಮಕೂರು: ಸಿದ್ದಗಂಗಾ ಮಠಕ್ಕೆ ಸರ್ಕಾರ ನೀಡುತ್ತಿದ್ದ ದಿನಸಿ ಸರಬರಾಜು ಸ್ಥಗಿತಗೊಂಡಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ 2 ತಿಂಗಳಿನಿಂದ ಮಠಕ್ಕೆ ಸರ್ಕಾರ ನೀಡುತ್ತಿದ್ದ ರೇಷನ್ ಬಂದಿಲ್ಲ, ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಬಂದಿಲ್ಲ. ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರ ಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ರೇಷನ್ ಪೂರೈಕೆ ಮಾಡುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.
ಇನ್ನು ಇಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ಸೆಸ್ ನಾಯಕ ಯುಟಿ ಖಾದರ್, ಜನಪರ, ಬಡವರ ಯೋಜನೆಗಳನ್ನು ಸ್ಥಗಿತಗೊಳಿಸಿರುವುದು ಸಮರ್ಥನೀಯವಲ್ಲ. ಸರ್ಕಾರದ ಧೋರಣೆ ವಿರುದ್ಧ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಧ್ವನಿಯೆತ್ತಲಿದೆ ಎಂದು ಹೇಳಿದರು. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ತಾವು ಆಹಾರ ಸಚಿವರಾಗಿದ್ದಾಗ ಉಚಿತ ವಸತಿ, ಉಚಿತ ಆಹಾರ ನೀಡುವ ಸಂಘ ಸಂಸ್ಥೆಗಳಿಗೆ ವೃದ್ಧಾಶ್ರಮ, ಆಶ್ರಮಗಳ ಪ್ರತಿಯೊಬ್ಬರಿಗೆ ಹತ್ತು ಕೆ.ಜಿ.ಅಕ್ಕಿ, ಐದು ಕೆ.ಜಿಗೋದಿ ನೀಡಲಾಗುತ್ತಿತ್ತು. ಆರು ತಿಂಗಳಿಗೊಮ್ಮೆ ಆಹಾರ ದಾಸ್ತಾನು ಪೂರೈಸುವ ದಾಸೋಹ ಕಾರ್ಯಕ್ರಮ' ಜಾರಿಯಲ್ಲಿತ್ತು. ಇದರಿಂದ ಇಂತಹ ಅಬಲರಿಗೆ ಯೋಜನೆಯಿಂದ ಪ್ರಯೋಜನವಾಗುತ್ತಿತ್ತು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.
Advertisement