ಕಲಬುರಗಿ: ಸಂಪುಟ ವಿಸ್ತರಣೆ ಗುರುವಾರ ಸಂಪೂರ್ಣಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಮಾಡುವ ಹಿನ್ನೆಲೆಯಲ್ಲಿ ಕಲಬುರಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರು, ಸಂಪುಟ ವಿಸ್ತರಣೆ ಗುರುವಾರ ಖಂಡಿತವಾಗಿಯೂ ಸಂಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ನಿಗಮ ಮಂಡಳಿಗೆ ಶಾಸಕರ ನೇಮಕ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ಹೈಕಮಾಂಡ್ ಮಾಹಿತಿ ನೀಡುತ್ತಿದ್ದಂತೆಯೇ ಇಂದು ಸಂಜೆ ಎಲ್ಲವೂ ಅಂತಿಮಗೊಳ್ಳಲಿದೆ. ಸಂಪುಟ ಸೇರ್ಪಡೆ ಕುರಿತ ಪ್ರತೀ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಗುರುವಾರ ಬೆಳಿಗ್ಗೆ 10.30ಕ್ಕೆ ಸಂಪುಟ ವಿಸ್ತರಣೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಬಳಿಕ ಹಿರಿಯ ನಾಯಕ ಹಾಗೂ ಶಾಸಕ ಉಮೇಶ್ ಕತ್ತಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ.
ಮಾರ್ಚ್ 3 ರಂದು ರಾಜ್ಯ ಬಜೆಟ್ ಮಂಡನೆಗೊಳ್ಳಲಿದೆ. ಪ್ರಸಕ್ತ ಸಾಲಿನ ಬಜೆಟ್ ರೈತರ ಹಾಗೂ ಮಹಿಳೆಯರ ಪರವಾಗಿರಲಿದೆ. ಈಗಾಗಲೇ ಎಲ್ಲಾ ಇಲಾಖೆಗಳ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಯಾವುದೇ ಜಿಲ್ಲೆಯನ್ನೂ ತಾರತಮ್ಯ ಮಾಡಲಾಗಿಲ್ಲ. ರಾಜ್ಯಾಭಿವೃದ್ಧಿಗೆ ಬಜೆಟ್ ಸಹಾಯಕವಾಗಲಿದೆ ಎಂದಿದ್ದಾರೆ.
Advertisement