ಬೆಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 20 ಮತ್ತು 21ರಂದು ಕೆಎಸ್ಆರ್ಟಿಸಿಯಿಂದ 300ಕ್ಕೂ ವಿಶೇಷ ಬಸ್ ಸೇವೆ ಒದಗಿಸಲಾಗಿದೆ.
ಗುರುವಾರ ಮತ್ತು ಶುಕ್ರವಾರ ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೆಚ್ಚುವರಿಯಾಗಿ 300 ವಿಶೇಷ ಬಸ್ ಹಾಗೂ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಫೆಬ್ರವರಿ 23ರಂದು ವಿಶೇಷ ಬಸ್ ಸೇವೆಯನ್ನು ಒದಗಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ , ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಸೇರಿದಂತೆ ಇನ್ನಿತರೆ ಸ್ಥಳಗಳಿಗೆ ವಿಶೇಷ ಬಸ್ಗಳು ಹೆಚ್ಚುವರಿಯಾಗಿ ಸಂಚರಿಸಲಿವೆ.
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್ಗಳು ಸಂಚರಿಸಲಿವೆ. ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಪ್ರದೇಶಗಳಿಗೆ ತೆರಳುವ ಐಷಾರಾಮಿ ಬಸ್ಗಳು ಶಾಂತಿನಗರದಲ್ಲಿನ ಡಿಪೊ 4 ಮತ್ತು ಡಿಪೊ 2ರ ಮುಂಭಾಗದಿಂದ ಕಾರ್ಯಾಚರಣೆಗೊಳ್ಳಲಿವೆ.
ನಾಲ್ಕು ಅಥವಾ ಹೆಚ್ಚು ಮಂದಿ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ, ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್ ಒಮ್ಮೆಲೇ ಕಾಯ್ದಿರಿಸಿದರೆ, ವಾಪಸ್ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.
Advertisement