ರಾಯಚೂರು: ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.
ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ನಿಮಾರ್ಣಕ್ಕೆಂದೇ ಕೇಂದ್ರ ಸರ್ಕಾರದಿಂದ 1 ಕೋಟಿ ರೂ. ಮಂಜೂರಾಗಿದ್ದು, 90 ಲಕ್ಷ ರೂ. ಬಿಡುಗಡೆ ಆಗಿತ್ತು. ಕಾರಣಾಂತರಗಳಿಂದ 10 ಲಕ್ಷ ರೂ. ಮಾತ್ರ ಬಾಕಿ ಉಳಿದಿತ್ತು. ಈ ಕಾರಣಕ್ಕೆ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಉದ್ಘಾಟನೆಯಾಗಿರಲಿಲ್ಲ. ಈ ವಿಷಯ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿಯವರ ಗಮನಕ್ಕೆ ಬಂದ ಕೂಡಲೇ, ಹಾಸ್ಟೆಲ್ ಕಟ್ಟಡ ವಿದ್ಯಾರ್ಥಿಗಳ ಬಳಕೆಗೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಬೀಜನಗೇರಾ ಮಾರ್ಗದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣವಾಗಿ 10 ವರ್ಷಗಳಾಗಿದ್ದು, ಕೆಆರ್ಐಡಿಎಲ್ನಿಂದ ಇನ್ನೂ ಹಸ್ತಾಂತರವಾಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಆದ್ದರಿಂದ ಬಾಕಿ ಹಣ ಪಾವತಿಸಿ ಹಾಸ್ಟೆಲ್ ಕಟ್ಟಡ ಉದ್ಘಾಟಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಬಳಸಿಕೊಳ್ಳುವಂತೆ ಉಪಮುಖ್ಯಮಂತ್ರಿ ನಿರ್ದೇಶನ ನೀಡಿದರು.
Advertisement