ಬೆಳಗಾವಿ: ಮಹಾದಾಯಿ ನದಿ ನೀರು ಹಂಚಿಕೆಗೆ ನ್ಯಾಯಾಧೀಕರಣದ ತೀರ್ಪಿನ ಅನುಗುಣವಾಗಿ ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಮಾನ ನಿಲ್ದಾಣದಲ್ಲಿ ನೂರಾರು ರೈತರು ಅದ್ದೂರಿಯಾಗಿ ಹಸಿರು ಸ್ವಾಗತ ನೀಡಿದರು.
ರೈತರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದರು. ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಹರ್ಷೋದ್ಘಾರ ಮಾಡಿದರು.
ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ನೂರಾರು ರೈತರು ಅಭಿನಂದನೆಯಲ್ಲಿ ಭಾಗಿಯಾಗಿದ್ದರು. ಶ್ರೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಚಿವರಿಗೆ ಹಕ್ಕೊತ್ತಾಯ ಮಂಡಿಸಿದರು. ರೈತರ ಸಂಕೇತವಾದ ಹಸಿರು ಟಬಲ್ ಹೊದಿಸಿ ರಮೇಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಮಹದಾಯಿ ಯೋಜನೆ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ವಿಚಾರಣೆಗೆ ಬರಲಿದ್ದು, ಈಗ ಎನೂ ಮಾತನಾಡುವುದು ಬೇಡ. ಅಲ್ಲಿನ ತನಕ ಕಾದುನೋಡಿ ನಂತರ ಸಂಭ್ರಮಿಸಿ ಎಂದು ಕಿವಿ ಮಾತು ಹೇಳಿದರು.
ನಾಳೆ ಮಹದಾಯಿ ಯೋಜನೆ ಕಾಮಗಾರಿ ನಡೆಯಲಿರುವ ಬೆಳಗಾವಿ ಜಿಲ್ಲೆಯ ಖಾನಾಪುರದ ಕಣಕುಂಬಿಗೆ ಭೇಟಿ ನೀಡಿ, ಅಲ್ಲಿ ಎನೂ ಮಾಡಬೇಕು ಎಂಬುದನ್ನು ಪರಿಶೀಲಿಸುತ್ತೇನೆ. ಇದು ರೈತರ ಗೆಲವು. ಮಹಾರಾಷ್ಟ್ರ, ಗೋವಾ ರಾಜ್ಯಗಳ ರೈತರಲ್ಲಿ ಬೇಧ ಭಾವ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ನಾವು ದೈವ ಭಕ್ತರಿದ್ದು, ಇದೇ ಕಾರಣದಿಂದ ನಮಗೆ ಯಶಸ್ಸು ಲಭಿಸಿದೆ ಎಂದರು.
ಹಿಂದಿನಿಂದಲೂ ಹೋರಾಟ ಮಾಡಿದ ರೈತರನ್ನು ಅಭಿನಂದಿಸಬೇಕು. ಇನ್ನೂ ಕೆಲವೊಂದಿಷ್ಟು ವಿಷಯಗಳಿವೆ ಅವೆಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನಮ್ಮ ರಾಜ್ಯಕ್ಕೆ ಸೀಮಿತವಾದ ನೀರು ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಈ ಬಜೆಟ್ ನಲ್ಲಿ ಹೆಚ್ಚು ಅನುದಾನ ಮೀಸಲಿಡಲು ಪ್ರಯತ್ನಿಸುತ್ತೇನೆ ಎಂದರು.
Advertisement