ಬೆಂಗಳೂರು: ನಾಳೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವ ಚರ್ಚೆ ಮತ್ತೆ ಆರಂಭವಾಗಿದೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ನಾಳೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಜೊತೆಗೆ ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ.ಬಳಿಕ ಅಲ್ಲಿಂದ ತುಮಕೂರಿಗೆ ಹೆಲಿಕ್ಯಾಪ್ಟರ್ನಲ್ಲಿ ತೆರಳಲಿದ್ದು ಪ್ರಧಾನ ಮಂತ್ರಿ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ ಮಾಡಲಿದಾರೆ.
ನಾಳೆಯಿಂದ ಎರಡು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 01.20 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂ ರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಮಧ್ಯಾಹ್ನ 2.15ಗಂಟೆಗೆ ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಶಂಕು ಸ್ಥಾಪನೆಯನ್ನು ಅವರು ನೆರವೇರಿಸ ಲಿದ್ದಾರೆ.
ಶ್ರೀಮಠದಲ್ಲಿ ನಡೆಯಲಿರುವ ಕಾರ್ಯಕ್ರಮ ಖಾಸಗಿಯಾಗಿದ್ದು ಆಯ್ದ ಗಣ್ಯರಿಗೆ ಮಾತ್ರ ಅವಕಾಶವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಶ್ರೀ ಶಿವಕುಮಾರಸ್ವಾಮೀಜಿಗಳಿಗೆ 'ಭಾರತರತ್ನ' ಪ್ರಶಸ್ತಿ ಕುರಿತು ಮತ್ತೆ ಚರ್ಚೆ ಹಾಗೂ ಒತ್ತಾಯ ಸಾಮಾಜಿಕ ಜಾಲ ತಾಣಗಳಲ್ಲಿ ಆರಂಭವಾಗಿದೆ.
Advertisement