ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ‌ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ‌ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಂಸದೀಯ ಕಾರ್ಯದರ್ಶಿಗಳ ನೇಮಕಾತಿ‌ ಪ್ರಶ್ನಿಸಿ ವಿಜಯನಗರ ನಿವಾಸಿ ಎಂ.ಬಿ.ಆದಿನಾರಾಯಣ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಎ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.

ಸಂಸದೀಯ‌ ಕಾರ್ಯದರ್ಶಿ ನೇಮಕ ಮಾಡಲು ಮುಖ್ಯಮಂತ್ರಿಗಳಿಗೆ ಅಧಿಕಾರ ಇಲ್ಲ. ಒಟ್ಟು ಶಾಸಕರ ಪೈಕಿ ಶೇ. 15ರಷ್ಟು ಶಾಸಕರನ್ನು ಮಾತ್ರ ಸಚಿವ ಸಂಪುಟದ ಸದಸ್ಯರಾಗಿ ನಿಯೋಜಿಸಲು ಅವಕಾಶ ಇದೆ.‌ ಸಂಸದೀಯ ಕಾರ್ಯದರ್ಶಿಗಳು ಸಚಿವ ಸಂಪುಟ ಸ್ಥಾನಮಾನ ಹೊಂದಿದ್ದು, ಭತ್ಯೆ ಪಡೆಯುತ್ತಾರೆ.‌‌ ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್, ಕೌಜಲಗಿ ಮಹಾಂತೇಶ್ ಶಿವಾನಂದ, ರೂಪಕಲಾ ಎಂ.ಶಶಿಧರ್, ರಾಘವೇಂದ್ರ ಬಸವರಾಜ್ ಇಟ್ನಾಳ್, ಡಿ.ಎಸ್.ವಲಗೇರಿ, ವಿಧಾನಪರಿಷತ್ ಸದಸ್ಯರಾದ ಕೆ.ಎಂ.ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜ ಮತ್ತು ಕೆ.ಗೋವಿಂದರಾಜ್ ಅವರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದರು.

ಸಂಸದೀಯ ವ್ಯವಹಾರ ಇಲಾಖೆ ಕಾರ್ಯದರ್ಶಿ 2019ರ ಜನವರಿ 7ರಂದು ಅಧಿಕೃತ ರಾಜ್ಯಪತ್ರ ಬಿಡುಗಡೆ ಮಾಡಿದ್ದರು. ಈ ಕ್ರಮ ಪ್ರಶ್ನಿಸಿದ್ದ ಅರ್ಜಿದಾರರು ಸಂಸದೀಯ ಕಾರ್ಯದರ್ಶಿ ನೇಮಕಾತಿಯು ಸಂವಿಧಾನ ಪರಿಚ್ಛೇಧ 164(1-ಎ)ಕ್ಕೆ ವಿರುದ್ಧವಾಗಿದೆ.ಹಾಗಾಗಿ ಇವರನ್ನು ಹುದ್ದೆಯಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com