ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪಕ್ಷಗಳ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಷ್ಟ್ರಾದಾದ್ಯಂತ ಜಾಗೃತಿ ಅಭಿಯಾನ ಪ್ರಾರಂಭಿಸಿರುವ ಆಡಳಿತ ಪಕ್ಷ ಬಿಜೆಪಿಯ ರಾಜ್ಯದ ಮೊದಲ ಬೃಹತ್ ಸಮಾವೇಶ ಶನಿವಾರ ಆರಂಭಗೊಳ್ಳಲಿದ್ದು, ನಗರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಿರುವ ಹಿನ್ನೆಲೆಯಲ್ಲಿ, ಅರಮನೆ ಮೈದಾನದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಭದ್ರತೆಗಾಗಿ 1,400 ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ 1 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಅಮಿತ್ ಶಾ ಸ್ವಾಗತಕ್ಕೆ ನಗರವಿಡೀ ಕೇಸರಿ ಮಯವಾಗಿದ್ದು, ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಸಂಜೆ 4.30ರಿಂದ 6.30ರವರೆಗೆ ನಡೆಯಲಿರುವ ಸಮಾವೇಶಕ್ಕೆ 30-60 ಚದುರಡಿ ಸುತ್ತಳತೆಯ ಬೃಹತ್ ವೇದಿಕೆ ನಿರ್ಮಿಸಲಾಗಿದೆ.
ವೇದಿಕೆಯಲ್ಲಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸಚಿವರಾದ ಸುರೇಷ್ ಅಂಗಡಿ, ಪ್ರಹ್ಲಾದ್ ಜೋಶಷಿ, ಸದಾನಂದ ಗೌಡ, ಉಪಮುಖ್ಯಮಂತ್ರಿಗಳಾದ ಸವದಿ, ಕಾರಜೋಳ ಸಚಿವರಾದ ಜಗದೀಶ್ ಶೆಟ್ಟರ್, ಅಶೋಕ ಸೇರಿದಂತೆ 30ಕ್ಕೂ ಹೆಚ್ಚು ಮುಖಂಡರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ತೊಡಗಿದ್ದಾರೆ. ಹುಬ್ಬಳ್ಳಿ, ಧಾರವಾಡ, ಮಹಾನಗರ ಜಿಲ್ಲೆಯಲ್ಲದೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಶುಕ್ರವಾರದಿಂದಲೇ ಕಟ್ಟೆಚ್ಚರವಹಿಸಿದ್ದಾರೆ. ಈಗಾಗಲೇ ಎನ್ಎಸ್'ಜಿ 2 ತಂಡಗಳು ನಗರಕ್ಕೆ ಆಗಮಿಸಿದ್ದು, ಸಮಾವೇಶದ ಸ್ಥಳ ಪರಿಶೀಲಿಸಿದೆ.
Advertisement