ಪ್ರತಿಷ್ಠಿತ ಉದ್ಯಮಿಗಳಿಂದ ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಉತ್ಸಾಹದಾಯಕ ಪ್ರತಿಕ್ರಿಯೆ

ವಿಶ್ವ ಆರ್ಥಿಕ ವೇದಿಕೆ ಸಮಾವೇಶದ ಮೂರನೇ ದಿನವಾದ ಬುಧವಾರ ರಾಜ್ಯದ ಪಾಲಿಗೆ ಫಲಪ್ರದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು.
ಪ್ರತಿಷ್ಠಿತ ಉದ್ಯಮಿಗಳಿಂದ ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಉತ್ಸಾಹದಾಯಕ ಪ್ರತಿಕ್ರಿಯೆ

ದಾವೊಸ್: ವಿಶ್ವ ಆರ್ಥಿಕ ವೇದಿಕೆ ಸಮಾವೇಶದ ಮೂರನೇ ದಿನವಾದ ಬುಧವಾರ ರಾಜ್ಯದ ಪಾಲಿಗೆ ಫಲಪ್ರದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು.

ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.

ಹೂಡಿಕೆದಾರರೊಂದಿಗೆ ಮಾತುಕತೆ ನಡೆಸಿದ ಯಡಿಯೂರಪ್ಪ, ರಾಜ್ಯ ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ. ಎಲ್ಲ ರೀತಿಯ ಅಡಚಣೆಗಳನ್ನು ನಿವಾರಿಸಲಿದೆ. “ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೂಡಿಕೆಗೆ ಸೂಕ್ತ ನೆರವು ವೇದಿಕೆ ಒದಗಿಸಲಿದ್ದಾರೆ” ಎಂದು ತಿಳಿಸಿದರು.

ಈಗಾಗಲೇ ಬೆಂಗಳೂರಿನಲ್ಲಿ ಅಸ್ತಿತ್ವ ಹೊಂದಿರುವ ದಸ್ಸಾ ಸಿಸ್ಟಮ್ಸ್ 3ಡಿಎಸ್ ನಿಂದ ಹೂಡಿಕೆಯ ಕುರಿತು ಅತ್ಯಂತ ಭರವಸೆಯ ಪ್ರತಿಕ್ರಿಯೆ ವ್ಯಕ್ತವಾಯಿತು. ಕಂಪೆನಿಯ ಉಪಾಧ್ಯಕ್ಷ ‍ಫ್ಲಾರೆನ್ಸ್ ವರ್ಝೆಲೆನ್ ಅವರು ಬೆಂಗಳೂರು ಹಾಗೂ ಯಾವುದಾದರೂ ಜಿಲ್ಲೆಯಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುಸುವುದಾಗಿ ತಿಳಿಸಿದರು.

“ನಾವು ಪ್ರತಿ ಕೇಂದ್ರದಲ್ಲಿ ಪ್ರತಿ ವರ್ಷ ತಲಾ 2000 ಯುವಕರಿಗೆ ತರಬೇತಿ ನೀಡಿ, ದೊಡ್ಡ ಕಂಪೆನಿಗಳಲ್ಲಿ ಕೌಶಲ್ಯಪೂರ್ಣ ಉದ್ಯೋಗ ಪಡೆಯಲು ಅರ್ಹರನ್ನಾಗಿಸಲಿದ್ದೇವೆ”. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಯುವಕರಿಗೆ ತರಬೇತಿ ನೀಡಲು ತಾವು ಆಸಕ್ತರಾಗಿರುವುದಾಗಿ ಅವರು ತಿಳಿಸಿದರು.

ಎಂಜಿನಿಯರಿಂಗ್ ಪದವೀಧರರಿಗೂ ತರಬೇತಿ ನೀಡಲಾಗುವುದು. ಈ ಕೇಂದ್ರಗಳ ಸ್ಥಾಪನೆಗೆ ಒಂದು ದಶಲಕ್ಷ ಯುರೋ ಹೂಡಿಕೆ ಮಾಡಲಾಗುವುದು ಎಂದರು. ಬೆಂಗಳೂರು ರಕ್ಷಣಾ ಉಪಕರಣಗಳು ಹಾಗೂ ಎರೋಸ್ಪೇಸ್ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ವಲಯಗಳಲ್ಲಿ ತರಬೇತಿ ಹೊಂದಿದ ಯುವಕರಿಗೆ ಬೇಡಿಕೆ ಇರುವ ಕುರಿತು ಮುಖ್ಯಮಂತ್ರಿಯವರು ಗಮನ ಸೆಳೆದಾಗ ವರ್ಝೇಲೆನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಅಂತಹ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಉಕ್ಕು ಉದ್ಯಮಿ ಲಕ್ಷ್ಮಿ ಎನ್. ಮಿತ್ತಲ್ ಮಂಗಳವಾರ ರಾತ್ರಿ ಆಯೋಜಿಸಿದ್ದ ಸಿಐಐ ಭೋಜನ ಕೂಟದ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದರು. ಇಂದು ಬೆಳಿಗ್ಗೆಯೂ ಕರ್ನಾಟಕ ಪೆವಿಲಿಯನ್ ಗೆ ಆಗಮಿಸಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚಿಸಿದರು. ಅವರ ಕಂಪೆನಿಯು ಬಳ್ಳಾರಿಯಲ್ಲಿ ಈಗಾಗಲೇ 3000 ಎಕರೆ ಭೂಮಿ ಹೊಂದಿದೆ. “2010ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಅನುಮತಿ ನೀಡಿದ್ದು, ಕಾರಣಾಂತರಗಳಿಂದ ಇದಕ್ಕೆ ಅಡಚಣೆಗಳು ಉಂಟಾಗಿವೆ. ಈಗ ತಾವು ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿ ಎಂದು ಮನವಿ ಮಾಡಿದರು.

ಜತೆಗೆ ಕರ್ನಾಟಕದಲ್ಲಿ ಸೌರ ವಿದ್ಯುತ್ ಸ್ಥಾವರದಲ್ಲಿ ಹೂಡಿಕೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಉಕ್ಕು ತಯಾರಿಕಾ ಘಟಕ ಹಾಘೂ ಸೌರ ವಿದ್ಯುತ್ ಸ್ಥಾವರಗಳೆರಡರ ಯೋಜನೆಯನ್ನೂ ಕೂಡಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಅದಕ್ಕೆ ಮಿತ್ತಲ್ ಅವರು ಈ ಕೂಡಲೇ ಉಕ್ಕಿನ ಉಪಯೋಗದ ಕುರಿತ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದಾಗಿ ತಿಳಿಸಿದರು.

ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ ಕರ್ನಾಟಕದಲ್ಲಿ ಸರಕು ಸಾಗಾಣಿಕೆ ವಲಯದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದರು. ಈ ಸಂಸ್ಥೆಯು ವಿಶೇಷವಾಗಿ ಕೃಷಿ ಉತ್ಪನ್ನ ಹಾಗೂ ಶೀಘ್ರ ಕೊಳೆತುಹೋಗುವ ತರಕಾರಿ, ಆಹಾರ ವಸ್ತುಗಳು, ಹಣ್ಣು ಹಂಪಲು ಹಾಗೂ ಪುಷ್ಪಗಳ ಸಾಗಾಣಿಕೆಗೇ ಹೂಡಿಕೆ ಮಾಡಲಿದೆ. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೂ ಸಹ ಈ ಸಭೆಗಳಲ್ಲಿ ಭಾಗವಹಿಸಿದರು.

ಈ ಮಧ್ಯೆ ಯಡಿಯೂರಪ್ಪ ಬುಧವಾರ ಬೆಳಿಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಬೆಳಗಿನ ಉಪಾಹಾರ ಸಭೆ ನಡೆಸಿದರು. ಉಭಯ ರಾಜ್ಯಗಳ ಆರ್ಥಿಕ ಸ್ಥಿತಿ ಗತಿಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ರಾಜ್ಯದಲ್ಲಿರುವ ಕೈಗಾರಿಕೆಗಳಿಗೆ ಉತ್ತೇಜನಕಾರಿ ವಾತಾವರಣ ಹಾಗೂ ರಾಜ್ಯಕ್ಕೆ ಬಂಡವಾಳ ತರಲು ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಪ್ರತಿಯೊಬ್ಬ ಹೂಡಿಕೆದಾರನೂ ಬೆಂಗಳೂರು ಕುರಿತು ಹಾಗೂ ಪೂರ್ವರಾಷ್ಟ್ರಗಳಲ್ಲಿ ಬೆಂಗಳೂರು ಜ್ಞಾನಾಧಾರಿತ ಕೇಂದ್ರವಾಗಿ ಬೆಳೆದಿರುವ ಕುರಿತು ಉಲ್ಲೇಖಿಸುತ್ತಾರೆ. ಈ ವಿಷಯದಲ್ಲಿ ನಿಮ್ಮನ್ನು ಮೀರಿಸಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿಯವರನ್ನು ಅಭಿನಂದಿಸಿದರು.

ಯಡಿಯೂರಪ್ಪ ಅವರು ಕಮಲ್ ನಾಥ್ ಅವರಿಗೆ ರಾಜ್ಯ ಸರ್ಕಾರವು ಕೃಷಿ ವಲಯದಲ್ಲಿ ಕೈಗೊಂಡಿರುವ ನೂತನ ಉಪಕ್ರಮಗಳ ಕುರಿತು ಮಾಹಿತಿ ನೀಡಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಭಾರತ ಸರ್ಕಾರ ನೀಡುವ 6,000 ರೂ. ಗಳ ಜೊತೆಗೆ ಹೆಚ್ಚುವರಿಯಾಗಿ 4,000 ರೂ. ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಇದರಿಂದ 40 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ ಎಂದು ವಿವರಿಸಿದರು.

ಕಮಲ್ ನಾಥ್ ಅವರು ಬೆಂಗಳೂರನ್ನು ಕೃತಕ ಬುದ್ಧಿಮತ್ತೆ ಮತ್ತು ಆತಿಥ್ಯ ವಲಯಗಳ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಕುರಿತು ಅರಿತುಕೊಳ್ಳಲು ಆಸಕ್ತಿ ವಹಿಸಿದರು. ಅವರು ಕರ್ನಾಟಕ ಪೆವಿಲಿಯನ್ ಕುರಿತು ಹಾಗೂ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಹೂಡಿಕೆ ಆಕರ್ಷಿಸುವ ಕುರಿತು ಅಧಿಕಾರಿಗಳ ನಡೆಯನ್ನು ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com