ಶಿವಮೊಗ್ಗ: ಶಿವಮೊಗ್ಗದಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನಗರದ ಡಿ.ಎ.ಆರ್. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ಸಾರಿದರು.
ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತಿರುವ ನಾವು ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯನ್ನು, ಒಪ್ಪಿಕೊಂಡು ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ನಮ್ಮ ಕರ್ನಾಟಕ. ಸಂವಿಧಾನದ ಆಶಯದ ಭದ್ರ ಬುನಾದಿಯ ಮೇಲೆ ನಾಡ ಕಟ್ಟುವ ಕೆಲಸ ನಮ್ಮ ಸರ್ಕಾರ ಮುಂದುವರೆಸಿದೆ. ಇಂದು ಕರ್ನಾಟಕದ ಸಾಧನೆ ಅನೇಕ ರಾಜ್ಯಗಳಿಗೆ ಮಾದರಿಯಾಗಿದೆ. ಜ್ಞಾನಾಧಾರಿತ ಮಾನವ ಸಂಪನ್ಮೂಲ, ಪ್ರಾಕೃತಿಕ ಸಂಪತ್ತು, ವೈಶಿಷ್ಟ್ಯಪೂರ್ಣ ಸಾಮಾಜಿಕ ಚಿಂತನೆ, ಪ್ರಯೋಗಶೀಲ ಆಡಳಿತ, ಕರ್ನಾಟಕದ ಹೆಗ್ಗುರುತಾಗಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಸಮಾಜದ ಕೊನೆಯ ವ್ಯಕ್ತಿಯೂ ಬದುಕಿನಲ್ಲಿ ಭದ್ರತೆಯ ಭಾವ ಕಾಣಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ದೂರದೃಷ್ಟಿಯ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ವಿವರಿಸಿದರು.
Advertisement