ಬೆಂಗಳೂರು: ಜು.9ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವರು ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 25,000 ಗಡಿ ದಾಟಿದ್ದು, ವೈರಸ್ ಹರಡುವುದನ್ನು ನಿಯಂತ್ರಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಮತ್ತೊಮ್ಮೆ ಲಾಕ್'ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದು, ಈ ನಡುವೆ ಕೊರೋನಾ ಮಟ್ಟಹಾಕಲು ಸರ್ಕಾರ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದರ ಕುರಿತು ಜನತೆಯಲ್ಲಿ ಕುತೂಹಲ ಮೂಡಿದೆ.
ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನಾಲಯವನ್ನು ಈಗಾಗಲೇ ಕೊರೋನಾ ಕೇರ್ ಸೆಂಟರ್ ಆಗಿ ಮಾರ್ಪಡಿಸಲಾಗಿದ್ದು, ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವಲ್ಲ ಸರ್ಕಾರ ಗಮನಹರಿಸುತ್ತಿದೆ ಎಂದು ತಿಳಿದುಬಂದಿದೆ.
ಈ ನಡುವೆ ಮಾನ್ಸೂನ್ ತಿಂಗಳುಗಳಾದ ಜುಲೈ ಮತ್ತು ಆಗಸ್ಟ್ ನಲ್ಲಿ ಕೊರೋನಾ ಸೋಂಕು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಡಾ.ಸುದರ್ಶನ್ ಬಲ್ಲಾಳ್ ಹಾಗೂ ತಜ್ಞರು ಅಭಿಪ್ರಾಯಪಡುತ್ತಿದ್ದು, ಸರ್ಕಾರಕ್ಕೆ ಮುಂದಿನ ದಿನಗಳು ಸವಾಲಾಗಿ ಪರಿಣಮಿಸಲಿದೆ ಎಂದು ಹೇಳುತ್ತಿದ್ದಾರೆ.
Advertisement