ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಗ್ರಾಪಂ ಮಟ್ಟದ ಕಾರ್ಯಪಡೆ, ಗ್ರಾಮಮಟ್ಟದ ಕಾರ್ಯಪಡೆ ರಚಿಸಿ ಸರ್ಕಾರ ಆದೇಶ

ಗ್ರಾಮಾಂತರ ಭಾಗದಲ್ಲಿ ಕೋವಿಡ್‌-19 ವ್ಯಾಪಕವಾಗಿ ಹರಡದಂತೆ ತಡೆಯಲು ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮಮಟ್ಟದ ಕಾರ್ಯಪಡೆಯನ್ನು ರಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಬೆಂಗಳೂರು: ಗ್ರಾಮಾಂತರ ಭಾಗದಲ್ಲಿ ಕೋವಿಡ್‌-19 ವ್ಯಾಪಕವಾಗಿ ಹರಡದಂತೆ ತಡೆಯಲು ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮಮಟ್ಟದ ಕಾರ್ಯಪಡೆಯನ್ನು ರಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಕೋವಿಡ್ -19 ಕಾಯಿಲೆಯು ಸಾಂಕ್ರಾಮಿಕ ರೋಗವಾಗಿದ್ದು, ವಿಶ್ವದಾದ್ಯಂತ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಕಾಯಿಲೆಯನ್ನು ನಿಯಂತ್ರಿಸಲು ಹಾಗೂ ಒಬ್ಬರಿಂದ ಒಬ್ಬರಿಗೆ ಹರಡದಂತೆ ತಡೆಗಟ್ಟಲು ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈಸೋಂಕು ಹರಡದಂತೆ ಗ್ರಾಮ ಪಂಚಾಯತಿಗಳ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉಲ್ಲೇಖಿತ ಸರ್ಕಾರದ ಸುತ್ತೋಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಕಾರ್ಯಪಡೆ ಮತ್ತು ಗ್ರಾಮ ಮಟ್ಟದ ಕಾರ್ಯಪಡೆ ರಚಿಸಿ ಆದೇಶಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ರಚಿಸಲಾಗಿದ್ದು, ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಕಾರ್ಯಪಡೆಯ ಅಧ್ಯಕ್ಷರಾಗಿರುತ್ತಾರೆ. ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರು, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು, ಕೇಂದ್ರ ಸ್ಥಾನದ ಗ್ರಾಮ ಲೆಕ್ಕಾಧಿಕಾರಿ/ಕಂದಾಯ ನಿರೀಕ್ಷಕರು, ಹೋಬಳಿ ಕೇಂದ್ರ ಸ್ಥಾನವಾಗಿದ್ದಲ್ಲಿ ಉಪ ತಹಶೀಲ್ದಾರ್, ಸ್ಥಳೀಯ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಅಥವಾ ಅವರು ನೇಮಿಸಿದ ಪ್ರತಿನಿಧಿ, ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಥವಾ ಅವರ ಪ್ರತಿನಿಧಿ, ಅಂಗನವಾಡಿ ಮೇಲ್ವಿಚಾರಕರು ಅಥವಾ ಅವರ ಪ್ರತಿನಿಧಿ, ಎಎನ್‌ಎಂ/ಆಶಾಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಪ್ರತಿನಿಧಿ, ಗ್ರಾಮ ಮಟ್ಟದ ಪುನರ್ ವಸತಿ ಕಾರ್ಯಕರ್ತರು, ಸ್ಥಳೀಯವಾಗಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸ್ವಯಂ ಸೇವಕರು ಈ ಕಾರ್ಯಪಡೆಯ ಸದಸ್ಯರಾಗಿರುತ್ತಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಪಡೆಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸ್ವಯಂ ಸೇವಕರಾಗಲು ಇಚ್ಛಿಸಿದ್ದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಪಡೆಯಲ್ಲಿ ಸ್ವಯಂ ಸೇವಕರಾಗಿ ಭಾಗವಹಿಸಬಹುದು.

ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಪಡೆಯ ಜವಾಬ್ದಾರಿಗಳನ್ನು ನಿರ್ವಹಿಸಲು ಸಹಕರಿಸಬೇಕು ಎಂದು ತಿಳಿಸಲಾಗಿದೆ.

ಗ್ರಾಮಮಟ್ಟದ ಕಾರ್ಯಪಡೆಯಲ್ಲಿ ಗ್ರಾಮದ ಮತಗಟ್ಟೆ ಅಧಿಕಾರಿಗಳು ಸಂಚಾಲಕರಾಗಿರುತ್ತಾರೆ. ಉಳಿದಂತೆ ವೈದ್ಯಾಧಿಕಾರಿಗಳು ಅಥವಾ ಅವರ ಪ್ರತಿನಿಧಿ, ಗ್ರಾಮ ಲೆಕ್ಕಿಗರು, ಗ್ರಾಮದ ಎಲ್ಲಾ ಆಶಾ ಕಾರ್ಯಕರ್ತೆಯರು, ವಾಟರ್ ಮ್ಯಾನ್ (ನೀರುಗಂಟಿ), ಎಲ್ಲಾ ಕೊರೊನಾ ಸೈನಿಕರು ಈ ಕಾರ್ಯಪಡೆಯ ಸದಸ್ಯರಾಗಿರುತ್ತಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ನಾಮ ನಿರ್ದೇಶಿತ ಗ್ರಾಮ ಪಂಚಾಯತಿ ಸಿಬ್ಬಂದಿ/ ವಿಆರ್‌ಪಿ/ಸಿಆರ್‌ಪಿ ಕಾರ್ಯಪಡೆಯ ಸಂಯೋಜಕರಾಗಿರುತ್ತಾರೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com