ಶಿವಮೊಗ್ಗ: ಆರ್ಥಿಕವಾಗಿ ಹಿಂದುಳಿದಿರುವ ಕೋಟಾದ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಕೆಲವು ತಹಸೀಲ್ದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂಬ ವರದಿಗಳು ಬಂದಿದ್ದು, ಈ ಬಗ್ಗೆ ಗಮನಹರಿಸಿ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ನೀಡದೆ ಪ್ರಮಾಣಪತ್ರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಎಲ್ ವರಲಕ್ಷ್ಮಿ, ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವ ಉದ್ಯೋಗ ಮತ್ತು ಇತರ ಸೌಲಭ್ಯಗಳನ್ನು ನೀಡಲು ಹಲವು ಯೋಜನೆಗಳನ್ನು ನೀಡಲು ಕರ್ನಾಟಕ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇಕಡಾ 10ರಷ್ಟು ಮೀಸಲಾತಿಯನ್ನು ಬ್ರಾಹ್ಮಣರಿಗೆ ಕೇಂದ್ರ ಸರ್ಕಾರ ನೀಡುತ್ತದೆ. ರಾಜ್ಯದ ಬೊಕ್ಕಸಕ್ಕೆ ಹೊಣೆಯಾಗದ ರೀತಿಯಲ್ಲಿ ಷರತ್ತುಬದ್ಧವಾಗಿ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದರು.
ಬ್ರಾಹ್ಮಣ ಮಂಡಳಿಯಿಂದ ಸೌಲಭ್ಯ ಪಡೆಯಬೇಕಾದರೆ ಪ್ರಮಾಣಪತ್ರ ಕಡ್ಡಾಯವಾಗಿದೆ. ಪ್ರಮಾಣಪತ್ರ ಪಡೆಯಲು ಏನೇನು ಅರ್ಹತೆಗಳು ಬೇಕು ಎಂಬ ಬಗ್ಗೆ ಕಂದಾಯ ಇಲಾಖೆ ಘೋಷಣೆ ಮಾಡಿದೆ. ಆದರೆ ಕೆಲವು ತಹಶೀಲ್ದಾರ್ ಗಳು ಪ್ರಮಾಣಪತ್ರ ನೀಡಲು ಹಿಂದೇಟು ಹಾಕುತ್ತಾರೆ ಎಂಬುದು ಗಮನಕ್ಕೆ ಬಂದಿದೆ. ಈ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
Advertisement