ಬಳ್ಳಾರಿ: ಕೊರೋನಾ ಗೆದ್ದು ಹೋಂ ಕ್ವಾರಂಟೈನ್ನಲ್ಲಿದ್ದ ಮುಖ್ಯ ಪೇದೆಯೊಬ್ಬರು (45) ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡ
ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಅರಸಿಕೇರೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಜೂ.18ರಂದು ಠಾಣೆಯ ಸಿಬ್ಬಂದಿಯೊಂದಿಗೆ ತೆರಳಿ ಬಳ್ಳಾರಿ ಜಿಂದಾಲ್
ಬೈಪಾಸ್ನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಜೂ. 24ರಂದು ಕರ್ತವ್ಯ ಮುಗಿಸಿಕೊಂಡು ಬಸ್ಸಿನ ಮೂಲಕ ಬಳ್ಳಾರಿಯ ಹರಪನಹಳ್ಳಿಗೆ ವಾಪಸ್ಸಾಗಿದ್ದರು. ಹೀಗಾಗಿ ಅವರನ್ನು
ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ಇರುವುದು ಖಾತರಿಯಾಗಿತ್ತು. ನಂತರ ಮುಂಜಾಗ್ರತಾ
ಕ್ರಮವಾಗಿ ಅವರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.
ಬಳ್ಳಾರಿಯ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಜು.10 ರಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ತದನಂತರ ವೈದ್ಯರ ಸೂಚನೆ ಅನ್ವಯ ಸ್ವಗ್ರಾಮದಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಮತ್ತೆ ಜು.21ರಂದು ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಜು.23ರಂದು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಕೋವಿಡ್ 19 ಪರೀಕ್ಷೆಗೆ ವೈದ್ಯರು ಒಳಪಡಿಸಲಿದ್ದಾರೆ.
Advertisement