ಬೆಂಗಳೂರು: ರಾಜ್ಯ ಹೈಕೋರ್ಟ್ ಆವರಣದಲ್ಲಿ ಹೊಸದಾಗಿ ನಿರ್ಮಿಸಿರುವ ಗಿಡಮೂಲಿಕೆ ಹಾಗೂ ಔಷಧೀಯ ಉದ್ಯಾನಕ್ಕೆ ಚಾಲನೆ ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ರಾಜ್ಯ ಹೈಕೋರ್ಟ್, ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ತೋಟಗಾರಿಕೆ ಇಲಾಖೆ, ಗಿಡಮೂಲಿಕೆ ಮತ್ತು ಔಷಧೀಯ ಪ್ರಾಥಿಕಾರ ಮತ್ತು ಆರೋಗ್ಯ ಇಲಾಖೆಯು ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ಮೂಲಿಕೆ ಮತ್ತು ಔಷಧೀಯ ಉದ್ಯಾನ ಉದ್ಘಾಟನಾ ಕಾರ್ಯಕ್ರಮವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ವಿವಿಧ ರೀತಿಯ ಔಷಧೀಯ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.
ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಯೂ ಆದ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮಾತನಾಡಿ, ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವಾದ ಜೀವ ವೈವಿದ್ಯತೆ ಹಾಗೂ ಕೋವಿಡ್-19 ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ದೇಶಕ್ಕೆ ಮಾದರಿಯಾಗುವ ಹಾಗೂ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವ ಸಲುವಾಗಿ ಹೈಕೋರ್ಟ್ ಆವರಣದಲ್ಲಿ ಗಿಡಮೂಲಿಕೆ ಮತ್ತು ಔಷಧೀಯ ಉದ್ಯಾನ ನಿರ್ಮಿಸಲಾಗಿದೆ ಎಂದು ತಿಳಿಸಿದರು.
Advertisement