ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ, ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಬಂಧನ!

ಇಂದು ಕೊರೋನಾ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ಪಾಷಾ ರೋಡ್ ಶೋ
ಇಮ್ರಾನ್ ಪಾಷಾ ರೋಡ್ ಶೋ
Updated on

ಬೆಂಗಳೂರು: ಇಂದು ಕೊರೋನಾ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದವಾರ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್-19 ವಿಭಾಗಕ್ಕೆ ದಾಖಲಿಸಲಾಗಿತ್ತು. ಇದೀಗ ಇಮ್ರಾನ್ ಪಾಷಾ ಸಂಪೂರ್ಣ ಗುಣಮುಖರಾಗಿದ್ದು, ಅವರ ಕೊರೋನಾ ವೈರಸ್ ಟೆಸ್ಟ್ ನೆಗೆಟಿವ್ ಬಂದಿತ್ತು. ಹೀಗಾಗಿ ಇಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಹೀಗೆ ಬಿಡುಗಡೆಯಾದ ಇಮ್ರಾನ್ ಪಾಷಾರನ್ನ ಅವರ ಅಭಿಮಾನಿಗಳು ಅದ್ಧೂರಿಯಾಗಿ ಮೆರವಣಿಗೆ ಕರೆದೊಯ್ಯುವ ಮೂಲಕ ಸ್ವಾಗತಿಸಿದ್ದರು. ಹೀಗೆ ಸ್ವಾಗತಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಪೊಲೀಸರು ಇಮ್ರಾನ್ ಪಾಷಾರನ್ನು ಬಂಧಿಸಿದ್ದಾರೆ. ಅಲ್ಲದೆ ವಿಕೋಪ ನಿರ್ವಹಣಾ ಕಾಯ್ಜೆ 2005ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿದ್ದು, ಇಮ್ರಾನ್ ಪಾಷಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಮ್ರಾನ್ ಪಾಷಾ ಅವರು ಚುನಾಯಿತ ಪ್ರತಿನಿಧಿಯಾಗಿದ್ದು ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಭಾಸ್ಕರ್ ರಾವ್ ಹೇಳಿದ್ದಾರೆ. ಅಲ್ಲದೇ ಉನ್ನತ ಮಟ್ಟದ ಅಧಿಕಾರಿಗಳು ಪಾಷಾರನ್ನ ತನಿಖೆ ನಡೆಸುತ್ತಾರೆ. ಯಾವ ಕೇಸ್ ಹಾಕಬೇಕು ಅನ್ನೋದನ್ನು ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದು ಭಾಸ್ಕರ್ ರಾವ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com