ಉಡುಪಿ: ಆಗಸ್ಟ್ ವರೆಗೂ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾತನಾಡಿದ ಅವರು, ಯಾವುದೇ ಲಾಬಿ, ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.
ನನ್ನ ಗಮನ ಏನಿದ್ದರೂ ಸರ್ಕಾರಿ ಶಾಲೆಗಳ ಸಬಲೀಕರಣ ಮಾಡುವುದು. ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುವಂತೆ ಮಾಡುವುದೇ ನನ್ನ ಗುರಿ ಎಂದು ಹೇಳಿದ್ದಾರೆ.
ಕೊರೋನಾ ಸೋಂಕಿನ ಭೀತಿ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಪರೀಕ್ಷೆ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು, ತೆಲಂಗಾಣದಲ್ಲಿ ಮಾದರಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಡ ಕೇಳಿಬರುತ್ತಿದೆ. ಆದರೆ, ಇಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷೆ ರದ್ದಾಗುವುದಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಮಕ್ಕಳ ರಕ್ಷಣೆಗಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಕ್ಕಳು, ಶಿಕ್ಷಕರು ಗೊಂದಲಕ್ಕೊಳಗಾಗುವುದು ಬೇಡ ಎಂದರು.
ಎಲ್ಕೆಜಿ, ಯುಕೆಜಿ ಹಾಗು ಪ್ರಾಥಮಿಕ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಸೂಕ್ತ ಕ್ರಮವಲ್ಲ. ಈ ಕುರಿತು ಬುಧವಾರ ವಿಸ್ತ್ರತ ಚರ್ಚೆ ಬಳಿಕ ನಿರ್ಣಯ ತೆಗೆದುಕೊಳ್ಳಲಾವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಆಗಸ್ಟ್ ನಂತರವೇ ಶಾಲಾ ಕಾಲೇಜುಗಳನ್ನು ಆರಂಭಿಸುವ ಸಾಧ್ಯತೆಯಿದೆ. ಹಂತಹಂತವಾಗಿ ಶಾಲೆ ಆರಂಭಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
Advertisement