ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಸಹೋದರರ ಶವ ಪತ್ತೆ: ಅಣ್ಣನೇ ಕೊಲೆ ಮಾಡಿರುವ ಶಂಕೆ

ಸಹೋದರರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ  ಪತ್ತೆಯಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಹೋದರರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ  ಪತ್ತೆಯಾಗಿವೆ.

ಕಲ್ಯಾಣನಗರದ ಸಹದೇವ (27) ಹಾಗೂ ರಘುಸ್ವಾಮಿ (29) ಕೊಲೆಯಾದವರು. ಮೃತರು ಕಟ್ಟಡ ನಿರ್ಮಾಣದ ಕಾರ್ಮಿಕರಾಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲೇ ಅವರಿಬ್ಬರನ್ನು ಕೊಲೆ ಮಾಡಲಾಗಿದ್ದು, ಅಣ್ಣನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಟ್ಟಡದ ಕೊಠಡಿಯೊಂದರಲ್ಲಿ ಸಹದೇವ್, ರಘುಸ್ವಾಮಿ ಹಾಗೂ ಅವರ ಅಣ್ಣ ತಂಗಿದ್ದರು. ಕಳೆದ ಎರಡು ದಿನಗಳ ಹಿಂದೆ ಸಹೋದರರ ನಡುವೆ ಜಗಳವಾಗಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇಬ್ಬರು ಸಹೋದರರ ಮೇಲೆ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿದ್ದು, ಕುಡಿದ ನಶೆಯಲ್ಲಿ ಜಗಳ ಆಗಿರುವ ಸಾಧ್ಯತೆ ಇದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿ ಬಂದ ನಂತರವೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ. ಮೃತರ ಸಂಬಂಧಿಕರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 
ಸದ್ಯ ಮೃತರ ಅಣ್ಣ ನಾಪತ್ತೆಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ. ಅಲ್ಲದೇ, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com