ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ನಗರದ ಖಾಸಗಿ ರೆಸಾರ್ಟ್ ನಲ್ಲಿರುವ ಬಂಡಾಯ ಶಾಸಕರ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಅವರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಬಂಡಾಯ ಶಾಸಕರ ಭೇಟಿಗೆ ಅವಕಾಶ ಕೋರಿ ದಿಗ್ವಿಜಯ್ ಸಿಂಗ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ಅವರು, ಮಧ್ಯ ಪ್ರದೇಶ ಶಾಸಕರು ತಮ್ಮ ಜೀವಕ್ಕೆ ಅಪಾಯವಿದ್ದು, ಇದನ್ನು ತಪ್ಪಿಸಲು ಮಧ್ಯ ಪ್ರದೇಶದ ಯಾವುದೇ ಕಾಂಗ್ರೆಸ್ ನಾಯಕರಿಗೆ ತಮ್ಮ ಭೇಟಿಗೆ ಅವಕಾಶ ನೀಡಬಾರದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಮಾಡಿದ್ದನ್ನು ಉಲ್ಲೇಖಿಸಿದರು. ಅಲ್ಲದೆ ಈ ವಿಚಾರದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಾಧೀಶರು ಹೇಳಿದರು.
ಇದೇ ವೇಳೆ, ತಮ್ಮನು ಅಕ್ರಮವಾಗಿ ಬಂಧಿಸಲಾಗಿದೆ ಎಂಬ ದಿಗ್ವಿಜಯ್ ಸಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನಾನು ರಾಜ್ಯಸಭಾ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ಪ್ರಚಾರ ನಡೆಸಿ ಮತ ಕೇಳುವುದು ನಮ್ಮ ಹಕ್ಕು. ಹಾಗಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರರಿಂದ ಮತ ಕೇಳಲು ಇಲ್ಲಿಗೆ ಬಂದಿದ್ದೆ. ಆದರೆ , ಶಾಸಕರ ಭೇಟಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿ ನನಗೆ ಅವರ ಭೇಟಿಗೆ ಅವಕಾಶ ನೀಡುವಂತೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ದಿಗ್ವಿಜಯ್ ಸಿಂಗ್ ಅರ್ಜಿ ಸಲ್ಲಿಸಿದ್ದರು.
Advertisement