ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀ ವೀರ ಸೋಮೇಶ್ವರ ಸ್ವಾಮಿ ಮತ್ತು ಶ್ರೀ ವೀರ ಗಂಗಾಧರೇಶ್ವರ ಸ್ವಾಮಿ ಅವರ ಆಶೀರ್ವಾದ ಪಡೆದರು.
ಈ ವೇಳೆ ಕೊರೋನಾ ವೈರಸ್ ಸೋಂಕಿನ ಬಗ್ಗೆ ಮಾತನಾಡಿದ ಅವರು, ಆರೋಗ್ಯ ವಿಚಾರದಲ್ಲಿ ನಾನು ರಾಜಕೀಯ ಮಾಡೋಕೆ ಹೊಗೋದಿಲ್ಲ, ಸೋಕಿನ ವಿರುದ್ಧ ಹೋರಾಟ ಮಾಡುತ್ತಿರುವ ಸರ್ಕಾರಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಈಗ ನಮ್ಮ ಜನಗಳನ್ನ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೊರೊನಾ ವಿಚಾರದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ ಎಂದರು. ಉನ್ನತ ಮಟ್ಟದ ವೈದ್ಯರ ಸಭೆ ಕರೆದು ಹೊಣೆಗಾರಿಕೆಯನ್ನಾಗಿಸಬೇಕು. ಸೇವಾ ಮನೋಭಾವದಿಂದ ಕೆಲಸ ಮಾಡಲು ಖಾಸಗಿ ಅವರಿಗೂ ಸೂಚಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕೊರೊನಾ ವೈರಸ್ ಮುನ್ನೆಚ್ಚರಿಕೆಯಾಗಿ ನಿರಂತರ ರಜೆ ಘೋಷಣೆ ಮಾಡಲಾಗಿದೆ. ಇದರಿಂದ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. 15 ದಿನಗಳ ರಜೆ 1 ತಿಂಗಳು ಆದರೂ ಆಗಬಹುದು. ಹಾಗಾಗಿ ಬ್ಯಾಂಕ್ ಗ್ರಾಹಕರಿಗೆ ಇಎಂಐ ಕಟ್ಟಲು ಕಷ್ಟವಾಗುತ್ತಿದೆ. ಬಡ್ಡಿ ಮನ್ನಾ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡಿಕೆಶಿ ಮನವಿ ಮಾಡಿದರು.
ಈ ವೇಳೆ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಡಿಕೆಶಿವಕುಮಾರ್ ನಿರಾಕರಿಸಿದರು.
Advertisement