ಬೆಂಗಳೂರು: ಬಾಡಿಗೆ ಮನೆಯಲ್ಲಿರುವ ಆರೋಗ್ಯ ಸಿಬ್ಬಂದಿಯನ್ನು ಬಲವಂತದಿಂದ ಖಾಲಿ ಮಾಡಿಸುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ವೈದ್ಯರು, ಅರೆವೈದ್ಯಕೀಯದಂತಹ ಆರೋಗ್ಯ ಸಿಬ್ಬಂದಿಯನ್ನು ಮನೆಯಿಂದ ತೆರವುಗೊಳಿಸಲು ಪ್ರಯತ್ನಿಸುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು, ಮುನ್ಸಿಪಲ್ ಕಾರ್ಪೋರೇಷನ್, ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಜಗತ್ತಿನಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಸೋಂಕು ಹರಡದಂತೆ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಬಾರದು ಎಂದು ಸೂಚನೆ ನೀಡಲಾಗಿದೆ.
ಬಳ್ಳಾರಿಯಲ್ಲಿ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುತಿರುವ ಹಾಗೂ ರೋಗಿಗಳನ್ನು ಗುಣಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿರುವ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳನ್ನು, ಮನೆ ಖಾಲಿ ಮಾಡಲು ಮನೆ ಮಾಲೀಕರು ಒತ್ತಾಯಿಸುವುದು ಅಮಾನವೀಯ ಹಾಗೂ ಗಂಭೀರ ಸ್ವರೂಪದ ಅಪರಾಧ ಎಂದರು.
ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿರುವ ಕಾರಣ ಮುಂಜಾಗೃತ ದೃಷ್ಟಿಯಿಂದ ಅಧಿಕಾರಿಗಳನ್ನು ಹಾಗೂ ಆಸ್ಪತ್ರೆ ಸಿಬ್ಬಂದಿಗಳನ್ನು ಹೊರತುಪಡಿಸಿ, ಬೇರೆ ಯಾರನ್ನೂ ಭೇಟಿ ಮಾಡಲಾಗುವುದಿಲ್ಲ ಎಂದು ಶ್ರೀರಾಮುಲು ತಿಳಿಸಿದರು.
Advertisement