ಬೆಂಗಳೂರು: ತಮ್ಮನ್ನು ಊರಿಗೆ ಕಳುಹಿಸುವಂತೆ ಒತ್ತಾಯಿಸಿ ನಮ್ಮ ಮೆಟ್ರೋ ಕಾರ್ಮಿಕರು ಪ್ರತಿಭಟನೆ ನಡೆಸಿದರು, ಈ ಹಿನ್ನೆಲೆಯಲ್ಲಿ ಕೆಲ ಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಒಂದೆಡೆ ಸೇರಿದ ನಮ್ಮ ಮೆಟ್ರೋ ಕಾರ್ಮಿಕರು ಪಾರ್ಕಿಂಗ್ ಮಾಡಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಕಂಪನಿಯ 936 ಗುತ್ತಿಗೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಕಾತುರರಾಗಿದ್ದು, ಅದಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.ತಮಗೆ ಸರಿಯಾಗಿ ಊಟ ನೀರು ಸಿಗುತ್ತಿಲ್ಲ, ಪ್ರತಿ ಹೊತ್ತಿನ ಊಟಕ್ಕಾಗಿ ಪರದಾಡುತ್ತಿರುವುದಾಗಿ ಕಾರ್ಮಿಕರು ತಮ್ಮ ಅಳಲು ತೋಡಿಕೊಂಡರು.
ಕಾರ್ಮಿಕರನ್ನು ಮಾತ್ರ ಊರಿಗೆ ಕಳುಹಿಸಲಾಗಿದೆ, ನಮ್ಮನ್ನು ಊರಿಗೆ ಕಳುಹಿಸಲು ವ್ಯವಸ್ಥೆ ಬೇಗ ಆಗಬೇಕು’ ಎಂದು ಜಾರ್ಖಂಡ್, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಕಾರ್ಮಿಕರು ಗಲಾಟೆಗೆ ಮುಂದಾದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ‘ಎಲ್ಲರನ್ನೂ ಹಂತ ಹಂತವಾಗಿ ಊರಿಗೆ ಕಳುಹಿಸುವ ವ್ಯವಸ್ಥೆ ಮಾಡುತ್ತೇವೆ' ಎಂದು ತಿಳಿ ಹೇಳಿದ್ದರಿಂದ ಸಮಾಧಾನಗೊಂಡ ಕಾರ್ಮಿಕರು, ಪೊಲೀಸರೊಂದಿಗೆ ಸಹಕರಿಸುವುದಾಗಿ ಒಪ್ಪಿ, ಪ್ರತಿಭಟನೆ ಹಿಂತೆಗೆದುಕೊಂಡರು.
Advertisement