ಬೆಂಗಳೂರು: ಲಾಕ್'ಡೌನ್ ನಡುವಲ್ಲೂ ರಾಮನಗರದಲ್ಲಿ ಜಾತ್ರೆಗೆ ಅನುಮತಿ ನೀಡಿದ್ದ ಅಧಿಕಾರಿಗಳ ವಿರುದ್ಧ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ರಾಮನಗರ ಜಿಲ್ಲೆ ಕನಕಪುರದ ಕೊಳಗೊಂಡನಹಳ್ಳಿಯಲ್ಲಿರುವ ದೇಗುಲವೊಂದರ ಆವರಣದಲ್ಲಿ ಜಾತ್ರೆ ನಡೆಸಲಾಗಿದ್ದು, ಜಾತ್ರೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರು, ಪಂಚಾಯತ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಉಪ ಆಯುಕ್ತರ ಬಳಿ ಈ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಜಾತ್ರೆಗೆ ಅನುಮತಿ ನೀಡಿಲ್ಲ ಪ್ರತೀಯೊಬ್ಬ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪಂಚಾಯತ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಉಳಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈ ನಡುವೆ ರಾಮನಗರ ಜೈಲಿಗೆ ಆಜಾದ್ ನಗರ ಪುಂಡರನ್ನು ಸ್ಥಳಾಂತರಿಸುವ ವೇಳೆ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು, ಜಾತ್ರೆ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನೂ ಮೌನ ತಾಳಿದ್ದಾರೆ.
Advertisement