ಗ್ರಾ.ಪಂ.ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು: ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತ್‌ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತ್‌ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, 5 ವರ್ಷಗಳ ಹಿಂದೆ ರಾಜ್ಯದ 6024 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಗಳಲ್ಲಿ 97060 ಸದಸ್ಯರು ಆಯ್ಕೆಯಾಗಿರುತ್ತಾರೆ. ಬರ, ಪ್ರವಾಹ ಕಠಿಣ ಪರಿಸ್ಥಿತಿಯನ್ನು ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಸುಸೂತ್ರವಾಗಿ ನಿಭಾಯಿಸುವುದರ ಮೂಲಕ ಉತ್ತಮವಾಗಿ ಕೆಲಸ ಮಾಡಿದ್ದಾರೆ.ಕೋವಿಡ್‌-19 ನ ಈ ಬಿಕ್ಕಟ್ಟನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ನಗರಗಳಿಂದ ವ್ಯಾಪಕವಾಗಿ ಜನರು ಹಳ್ಳಿಗಳಿಗೆ ವಲಸೆ ಹೋದರೂ ಈ ಬೇಸಿಗೆಯಲ್ಲಿ ಕುಡಿಯುವ ನೀರು, ನೈರ್ಮಲ್ಯ ಮುಂತಾದ ಸಮಸ್ಯೆಗಳು ಸೃಷ್ಟಿಯಾಗದಂತೆ ಗ್ರಾಮ ಪಂಚಾಯಿತಿಗಳು ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸುತ್ತಿವೆ. ಈ ಸದಸ್ಯರುಗಳ ಪದಾವಧಿ ಮುಂದಿನ ಒಂದೆರಡು ತಿಂಗಳಲ್ಲಿ ಮುಗಿಯುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂವಿಧಾನದ ಅನುಚ್ಛೇದ 243 ರ ಪ್ರಕಾರ ಚುನಾವಣೆಗಳನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ನಡೆಸಬೇಕಾಗಿದೆ. ಆದರೆ ಕೊರೋನ ಸೋಂಕಿನ ಹೆಸರು ಹೇಳಿಕೊಂಡು ಸರ್ಕಾರ ಚುನಾವಣೆಗಳನ್ನು ಮುಂದೂಡಲು ಪ್ರಯತ್ನಿಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಹ ನಿಗದಿ ಪಡಿಸಿದ ಅವಧಿಯ ಒಳಗೆ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡಿವೆ ಎಂದು ಅವರು ಹೇಳಿದ್ದಾರೆ. 

ಕೊರೋನ ಬಿಕ್ಕಟ್ಟಿನ ನೆಪದಲ್ಲಿ ಚುನಾವಣೆಗಳನ್ನು ನಡೆಸದೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮ ನಿರ್ದೇಶಿತ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರ ಒಂದು ವೇಳೆ ಹೀಗೆ ಮಾಡಿದ್ದೆ ಆದರೆ ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ. ಗ್ರಾಮ ಪಂಚಾಯತಿಗಳ ಕಾರ್ಯ ವೈಖರಿಯ ಬಗ್ಗೆ ಏನೇನೂ ತಿಳಿವಳಿಕೆ ಇಲ್ಲದವರನ್ನು,ನಿರ್ದಿಷ್ಟ ಸಿದ್ಧಾಂತಗಳ ಹಿನ್ನೆಲೆಯವರನ್ನು ಸೇರಿಸಿ ಆಡಳಿತ ಸಮಿತಿ ರಚಿಸಿದರೆ ಕೊರೋನದಂತಹ ಭೀಕರ ಬಿಕ್ಕಟ್ಟನ್ನು ನಿಭಾಯಿಸಲು ಕಷ್ಟವಾಗುತ್ತದೆ. ಇದರಿಂದ ಗ್ರಾಮೀಣ ಕರ್ನಾಟಕ ತೀವ್ರ ಅನ್ಯಾಯಕ್ಕೆ ತುತ್ತಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಯಾವುದೇ ಕಾರಣಕ್ಕೂ ಹೊಸ ಆಡಳಿತ ಸಮಿತಿ ರಚಿಸುವ , ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ಒಂದು ವೇಳೆ ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987 ರಲ್ಲಿ ಮಾಡಿದ್ದಂತೆ, ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮತ್ತು ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು. ಅದರ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com