ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಲೋಕೇಶ್ವರ ರಾವ್ (31) ಹತ್ಯೆಗೀಡಾದ ವ್ಯಕ್ತಿ. ರಾವ್ ಇಂದು ಬೆಳಗ್ಗೆ ಉದಯನಗರ ಮುಖ್ಯರಸ್ತೆಯ ಬಳಿ ಇದ್ದಾಗ ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ಲೋಕೇಶ್ವರ ರಾವ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿದ್ದ ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಆರೋಪಿಗಳ ಪೈಕಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಉಳಿದವರ ಮಾಹಿತಿ ಲಭ್ಯವಾಗಿದೆ. ಶೀಘ್ರವೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಹಳೆಯ ವೈಷಮ್ಯದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಗೊಂಡಿದೆ.
Advertisement