ಕೊರೋನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳನ್ನೇಕೆ ಬಿಡುತ್ತೀರಿ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಸಾಮಾನ್ಯ ಜನರು ಮಾಸ್ಕ್ ಹಾಕದೆ ಹಾಗೂ ಸಾಮಾಜಿಕ ಅಂತಹ ಪಾಲಿಸದೆ ಕೋವಿಡ್-19 ನಿಯಮ ಉಲ್ಲಂಧಿಸಿದರೆ ದಂಡ ವಿಧಿಸುತ್ತೀರಿ. ಅದೇ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಗುರುವಾರ ಕಟುವಾಗಿ ಪ್ರಶ್ನಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾಮಾನ್ಯ ಜನರು ಮಾಸ್ಕ್ ಹಾಕದೆ ಹಾಗೂ ಸಾಮಾಜಿಕ ಅಂತಹ ಪಾಲಿಸದೆ ಕೋವಿಡ್-19 ನಿಯಮ ಉಲ್ಲಂಧಿಸಿದರೆ ದಂಡ ವಿಧಿಸುತ್ತೀರಿ. ಅದೇ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಸಾಮಾನ್ಯ ಜನರಿಗಷ್ಟೇ ಕಾನೂನು ಇದೆಯೇ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಗುರುವಾರ ಕಟುವಾಗಿ ಪ್ರಶ್ನಿಸಿದೆ. 

ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ಬಂದಿತ್ತು. 

ಈ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ರಾಜಕಾರಣಿಗಳು ಉಲ್ಲಂಘಿಸುತ್ತಿರುವ ಪ್ರಕರಣಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದಕ್ಕೆ ನ್ಯಾಯಪೀಠ ಬೇಸ ವ್ಯಕ್ತಪಡಿಸಿತು. 

ಜನಪ್ರತಿನಿಧಿಗಳು ಹಾಗೂ ಗಣ್ಯರು ಕೊರೋನಾ ನಿಯಮಗಳನ್ನು ಉಲ್ಲಂಘಿಸಿರುವುದು ಫೋಟೋಗಳಲ್ಲಿಯೇ ಸ್ಪಷ್ಟವಾಗಿ ಕಾಣುತ್ತಿದೆ. ಆದರೆ, ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಿಲ್ಲ. ಬದಲಿಕೆ ಕ್ರಮ ಜರುಗಿಸಲಾಗುತ್ತಿದೆ ಎಂಬುದಾಗಿ ಕಣ್ಣೊರೆಸುವ ಉತ್ತರ ನೀಡುತ್ತಿದೆ. ಅದೇ ಸಾಮಾನ್ಯ ಜನರು ಮಾಸ್ಕ್ ಹಾಕದೆ ಸಿಕ್ಕಿಬಿದ್ದರೆ ರೂ.250 ದಂಡ ವಿಧಿಸುತ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ, ರಾಜಕಾರಣಿಗಳ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಸರ್ಕಾರವು ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದೆ ಎಂದು ಸರ್ಕಾರಿ ವಕೀಲರನ್ನು ಖಾರವಾಗಿ ಪ್ರಶ್ನಿಸಿತು. 

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಆಧ್ಯಕ್ಷರೂ ಆಗಿರುವ ಸಂಸದ ತೇಜಸ್ವಿ ಸೂರ್ಯ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ್ದವರ ವಿರುದ್ಧ ಹಾಗೂ ಆರ್.ಆರ್.ನಗರ ಪ್ರಚಾರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಪೀಠ, ರ್ಯಾಲಿಯಲ್ಲಿ ಮಾಸ್ಕ್ ಧರಿಸದ, ಅಂತರ ಪಾಲಿಸದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಖುದ್ದು ನಗರ ಪೊಲೀಸ್ ಆಯುಕ್ತರು ವಿವರಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com