ಆತ್ಮನಿರ್ಭರ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1: ಸಚಿವ ಎಸ್ ಟಿ.ಸೋಮಶೇಖರ್

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆತ್ಮನಿರ್ಭರ ಯೋಜನೆಯ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1 ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸೋಮಶೇಖರ್
ಸೋಮಶೇಖರ್

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆತ್ಮನಿರ್ಭರ ಯೋಜನೆಯ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1 ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಹಕಾರ ಸಪ್ತಾಹ 2020ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 'ಕರ್ನಾಟಕ ಸಹಕಾರಿ ಇಲಾಖೆ ದೇಶದಲ್ಲಿಯೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ ಪ್ಯಾಕೇಜ್ ಮೂಲಕ ರಾಜ್ಯದ  ಪಾಲಿನಲ್ಲಿ 670 ಕೋಟಿ ರೂಪಾಯಿಗೂ ಹೆಚ್ಚು ಅನುದಾನವನ್ನು ಸಹಕಾರ ಇಲಾಖೆಯು ಎಲ್ಲ ರಾಜ್ಯಗಳಿಗಿಂತ ಮೊದಲೇ ಕೇಳಿದ್ದು, ನಂಬರ್ 1 ಸ್ಥಾನದಲ್ಲಿದೆ. ಇದಕ್ಕೆ ಕೇಂದ್ರ ಸರ್ಕಾರ ಸಹ ಮೆಚ್ಚುಗೆ ಸೂಚಿಸಿದೆ ಎಂದು ತಿಳಿಸಿದರು.

ಈ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರು ಧಾರವಾಡದಲ್ಲಿ ನಡೆದ ಆರ್ಥಿಕ ಸ್ಪಂದನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು ಎಂದು ತಿಳಿಸಿದರು. ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಘೋಷಿಸಿದ ಆತ್ಮನಿರ್ಭರ ಯೋಜನೆಯ 20  ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಲ್ಲಿ ಕರ್ನಾಟಕದ ಪಾಲಾದ 4750 ಕೋಟಿ ರೂಪಾಯಿ ಬರಬೇಕು.ಅದರಲ್ಲಿ ಕರ್ನಾಟಕವು ಸುಮಾರು 670 ಕೋಟಿ ರೂಪಾಯಿಗಾಗಿ ಮೊದಲು ಪ್ರಸ್ತಾವನೆ ಸಲ್ಲಿಸಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವು  ದೇಶದಲ್ಲೇ ಪ್ರಥಮವಾಗಿದೆ. ನಂಬರ್ 1 ಸ್ಥಾನದಲ್ಲಿದೆ ಎಂದು ಕೇಂದ್ರ ಮೆಚ್ಚುಗೆ ಸೂಚಿಸಿದೆ ಎಂದು ಅವರು ತಿಳಿಸಿದರು.

ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳ ಮೂಲಕ 24.50 ಲಕ್ಷ ರೈತರಿಗೆ 15300 ಕೋಟಿ ರೂಪಾಯಿ ಸಾಲವನ್ನು ನೀಡಬೇಕೆಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಸರ್ಕಾರ ತೀರ್ಮಾನ ಮಾಡಿತ್ತು. ಕೋವಿಡ್ ನ ಕಷ್ಟದ ಪರಿಸ್ಥಿತಿಯಲ್ಲೂ ಸಹ  ನಾವು ರೈತರಿಗೆ ಯಾವುದೇ ಸಮಸ್ಯೆಯಾ ಗಬಾರದು ಎಂಬ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕ್ ಗಳ ಮುಖಾಂತರ ಸಾಲ ನೀಡುತ್ತಿದ್ದೇವೆ.ಕಳೆದ ಬಾರಿ 13,500 ಕೋಟಿಯನ್ನು ಕೊಡಲಾಗಿತ್ತು.ಆದರೆ,ಈ ಬಾರಿ 15,300 ಕೋಟಿ ಗುರಿಯನ್ನು ಹಾಕಿ ಕೊಂಡಿದ್ದು,ಈಗಾಗಲೇ ಇಲ್ಲಿಯವರೆಗೆ 15,22,076  ರೈತರಿಗೆ 9945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ.ಶೀಘ್ರದಲ್ಲಿ ನಾವು ಹಾಕಿಕೊಂಡಿರುವ ಗುರಿಯನ್ನು ಮುಟ್ಟುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸಹಕಾರ ಕ್ಷೇತ್ರದಲ್ಲಿ ಕೋಟ್ಯಂತರ ಜನ ಠೇವಣಿ ಇಟ್ಟಿದ್ದಾರೆ.ಲಕ್ಷಾಂತರ ಜನರಿಗೆ ಉದ್ಯೋಗ ಕೊಡಲಾಗಿದೆ.  ಕೋಟ್ಯಂತರ ಜನರಿಗೆ ಸಾಲ ಸೌಲಭ್ಯವನ್ನು ನೀಡಿ ಆರ್ಥಿಕವಾಗಿ ಸಬಲರಾಗುವಂತೆ ಮಾಡುವಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಬಹಳ ದೊಡ್ಡದಿದೆ ಎಂದು ಸಚಿವರು ತಿಳಿಸಿದರು.

ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಿದರು. ಇದರ ಮೂಲಕ 39,600 ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು  ಹಾಕಿಕೊಳ್ಳಲಾಗಿದೆ.ಆರ್ಥಿಕ ಸ್ಪಂದ ನವನ್ನು 4 ವಿಭಾಗಗಳಾಗಿ ವಿಂಗಡಿಸಿ ಚಾಲನೆ ನೀಡಿದ್ದೇವೆ. ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಕಾರ್ಯಕ್ರಮವನ್ನು ನಡೆಸಿ ಸಾಲ ಸೌಲಭ್ಯ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಯಾರಿಗೂ ಸಹ ಕೋವಿಡ್  ಸಂಕಷ್ಟದಿಂದ ಸಮಸ್ಯೆಯಾಗಬಾರದು. ಹೀಗಾಗಿ ಎಲ್ಲರಿಗೂ ಸಾಲ ಸಿಗುವಂತೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ಗಳ ಮುಖಾಂತರ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್ 19ರ ಸಂಕಷ್ಟದ ಕಾಲದಲ್ಲಿ ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ಹಾಗೂ ಎಪಿಎಂಸಿಗಳಿಂದ ದೇಣಿಗೆ ಸಂಗ್ರಹಿಸಿ 53 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಿದ್ದೇವೆ. ಇನ್ನು ಕೊರೋನಾ ವಾರಿಯರ್ಸ್ ಗಳಾದ 42600 ಆಶಾ ಕಾರ್ಯಕರ್ತೆಯರಿಗೂ  ಸಹ ತಲಾ 3000 ದಂತೆ ಒಟ್ಟು 12.75 ಕೋಟಿ ರೂಪಾಯಿಯನ್ನು ವಿತರಣೆ ಮಾಡಿದ್ದೇವೆ. ಇದು ನೂರಕ್ಕೆ ನೂರರಷ್ಟು ಯಶಸ್ವಿಯಾಗಿದ್ದಕ್ಕೆ ಸಂತಸ ವಿದೆ ಎಂದು ಸಚಿವರು ತಿಳಿಸಿದರು. 

ಸಹಕಾರ ಸಚಿವರಾದ ಸೋಮಶೇಖರ್ ಅವರು ಸಹಕಾರ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಾಗಿ ನಿಂದ ಇಲ್ಲಿಯವರೆಗೂ ಅನೇಕ ಕೆಲಸವನ್ನು ಮಾಡಿದ್ದಾರೆ.ಆಶಾ ಕಾರ್ಯಕರ್ತರಿಗೆ 3 ಸಾವಿರ ಪ್ರೋತ್ಸಾಹ ಕೊಡುವುದಿರಬಹುದು,ಸಾಲ ಸೌಲಭ್ಯವಿರಬಹುದು.ಇಂತಹ ಅನೇಕ  ಬದಲಾವಣೆಗಳನ್ನು ಸಹಕಾರ ರಂಗದಲ್ಲಿ ಮಾಡಿ ತೋರಿಸಿದ್ದಾರೆ.ಇಂಥ ಸಚಿವರ ಅಗತ್ಯ ನಮಗೆ ಖಂಡಿತಾ ಇತ್ತು.ಸಚಿವರಾದ ಸೋಮಶೇಖರ್ ಅವರು ನಿಪ್ಪಾಣಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರವನ್ನು ನೀಡಿದ್ದಾರೆ.ಅವರ ಈ ಸಹಕಾರಕ್ಕೆ ಧನ್ಯವಾದಗಳು ಎಂದು ಸಚಿವರಾದ ಶಶಿಕಲಾ ಜೊಲ್ಲೆ  ಹೇಳಿದರು. ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿ ಜಿಲ್ಲೆಯ ಶಾಸಕರುಗಳು, ಹಿರಿಯ ಸಹಕಾರಿಗಳು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com