ಹುಬ್ಬಳ್ಳಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಕುಸುಗಲ್ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರ ಹರ್ ಘರ್ ಜಲ್ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24x7 ನೀರು ಲಭ್ಯವಾಗುವಂತೆ ಮಾಡಲಾಗುವುದು. ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ ಹಾಗೂ ಕಸ ಸಂಗ್ರಹಿಸಲು ಗ್ರಾಮ ಪಂಚಾಯತಿಯಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಕುಸುಗಲ್ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಕುಸುಗಲ್ ಗ್ರಾಮಸ್ಥರು ನೀಡಿದ ಮನವಿ ಸ್ಪಂದಿಸಿದ ಕೇಂದ್ರ ಸಚಿವರು ಹುಬ್ಬಳ್ಳಿ ಬೈಪಾಸ್ ರಸ್ತೆಯಿಂದ ಕುಸುಗಲ್ ಗ್ರಾಮಕ್ಕೆ ಸರ್ವೀಸ್ ರೋಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿ.ಪಂ.ಸಿಇಓ ಬಿ.ಸುಶೀಲಾ ಉಪಸ್ಥಿತರಿದ್ದರು.
Advertisement