ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಕಟೀಲ್ ಭೇಟಿಯಾಗಿ ಚೆರ್ಚೆ ನಡೆಸಿದ ಬೆನ್ನ ಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ 33 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, 2 ಆಯೋಗಕ್ಕೆ ಹಾಗೂ 2 ಪ್ರಾಧಿಕಾರಗಳಿಗೆ ನೇಮಕ ಅಧ್ಯಕ್ಷರನ್ನು ನೇಮಕ ಗೊಳಿಸಿದ್ದಾರೆ.

ಇಬ್ಬರು ಹಾಲಿ ಶಾಸಕರಿಗೆ ಅಧ್ಯಕ್ಷಗಿರಿ ನೀಡಲಾಗಿದ್ದು, ಇನ್ನುಳಿದಂತೆ ಮಾಜಿ ಶಾಸಕರು, ಪಕ್ಷದ ಮುಖಂಡರು ಸೇರಿದ್ದಾರೆ. ಕೆಲ ತಿಂಗಳುಗಳ ಹಿಂದೆ ಕೇವಲ ಶಾಸಕರಿಗೆ ಮಾತ್ರ ನಿಗಮ ಮಂಡಳಿಗಳ ಅಧ್ಯಕ್ಷಗಿರಿ ನೀಡಲಾಗಿತ್ತು. ಮುಂದಿನ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರು ಭರವಸೆ ನೀಡಿದ್ದಾರೆ.

ಪ್ರತಿಷ್ಠಿತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ನೇಮಿಸಿರುವುದು ಅಚ್ಚರಿ ಮೂಡಿಸಿದೆ. ವಿಶ್ವನಾಥ್ ಹಾಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನವನ್ನೂ ಹೊಂದಿದ್ದಾರೆ. ಇದೀಗ ಬಿಡಿಎ ಅಧ್ಯಕ್ಷರಾಗಿ ನೇಮಕಗೊಂಡಿರುವುದರಿಂದ ಸಿಎಂ ರಾಜಯಕೀಯ ಕಾರ್ಯದರ್ಶಿ ಸ್ಥಾನ ತೆರುವುಗೊಳಿಸುವ ನಿರೀಕ್ಷೆಯಿದೆ. ರಾಯಭಾಗ ಶಾಸಕ ದುರ್ಯೋಧನ ಐಹೊಳೆರಿಗೆ ಡಾ.ಬಿ.ಆರ್.ಅಂಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕುಂದಗೋಳದ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರರಿಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಸ್ಥಾನ, ವಿಧಾನಪರಿಶತ್ತಿನ ಮಾಜಿ ಸದಸ್ಯೆ ತಾರಾ ಅನುರಾಧ ಅವರಿಗೆ ಕರ್ನಾಟಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ಚಿಕ್ಕನಾಯಕನಹಳ್ಳಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗಿರಿ, ವಿಧಾನಪರಿಷತ್ತಿನ ಮಾಜಿ ಸದಸ್ಯ ಎನ್.ಶಂಕರಪ್ಪರಿಗೆ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರಿ ಕಲ್ಪಿಸಲಾಗಿದೆ. 

ಯಡಿಯೂರಪ್ಪ ಅವರು ಪರಮಶಿವಯ್ಯ ಅವರನ್ನು ನಿಗಮ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಪರಮ ಶಿವಯ್ಯ ಪರಮಾಪ್ತರೂ ಹೌದು. ನಿಗಮ ರಚನೆ ಮಾಡುವ ವಿಚಾರದಲ್ಲಿ ಸಾಕಷ್ಟು ಅಪಸ್ವರಗಳು ಕೇಳಿ ಬಂದರೂ ಅದಾವುದಕ್ಕೂ ಸೊಪ್ಪು ಹಾಕದೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿದ್ದರು. 

ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿರುವ ಪರಮಶಿವಯ್ಯ ಅವರು ಸಮುದಾಯದ ಕಲ್ಯಾಣಕ್ಕಾಗಿ ಉಚಿತ ಶಿಕ್ಷಣ, ವಸತಿ ನಿಲಯಗಳನ್ನು ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com