ಕಲಬುರಗಿ: ಕಲ್ಯಾಣ ಕರ್ನಾಟಕ ಮತ್ತು ಮುಂಬೈ-ಕರ್ನಾಟಕದ ಕೆಲ ಸ್ಥಳಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ ಸಾವು ಭಾನುವಾರ ಏಳಕ್ಕೆ ಏರಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ 18 ಗಂಟೆಗಳಿಂದ ಮುಂದುವರಿದ ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಕಾಲುವೆಗಳಲ್ಲಿ ಮುಳುಗಿ ಇಬ್ಬರು ಬಾಲಕರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಮತ್ತು ಭಾನುವಾರ ಬೆಳಿಗ್ಗೆ ಸಂಭವಿಸಿದ ಮಳೆಯಿಂದಾಗಿ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳನ್ನೊಳಗೊಂಡ ಕಲ್ಯಾಣ ಕರ್ನಾಟಕ ಪ್ರಾಂತ್ಯದಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಶಹಾಬಾದ್ ಪಟ್ಟಣದ ಶಹಾಬಾದ್ ಚಿಕ್ ಅಣೆಕಟ್ಟಿನಲ್ಲಿ 15 ವರ್ಷದ ಇಬ್ಬರು ಬಾಲಕರು ಭಾನುವಾರ ಸಂಜೆ ಮುಳುಗಿ ಸಾವನ್ನಪ್ಪಿದ್ದಾರೆ.
ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಸಾವು
ಇನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುರಿದ ಜೋರು ಮಳೆಯಿಂದಾಗಿ ಗ್ಯಾರೇಜ್ ಕುಸಿದುಬಿದ್ದು, ಅದರೊಳಗಿದ್ದ ವ್ಯಕ್ತಿ ಮೃತರಾಗಿದ್ದಾರೆ. ಅವರನ್ನು ಅಸ್ಲಂ ಮೀರಾಸಾಬ್ ಅಲ್ಲಾಖಾನ್ (52) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಭೇಟಿ ನೀಡಿದ್ದರು. ಹುಕ್ಕೇರಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಾಲ್ಲೂಕು ಆಡಳಿತದಿಂದ ನೆರವು ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು. ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿತ್ತು. ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹಕ್ಕೆ ನಿಂತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ವೃದ್ಧರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದರು. ಯುವಕನೊಬ್ಬ ವಿದ್ಯುತ್ ಕಂಬದ ಆಸರೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
Advertisement