ಬೆಂಗಳೂರು: ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕೋವಿಡ್-19ನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಜಾರಿಗೆ ತರದಿರುವುದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೋವಿಡ್-19 ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ನಿಯಮಗಳನ್ನು ಜಾರಿಗೆ ತರುವ ಗಂಭೀರ ಪ್ರಯತ್ನ ಮಾಡಿಲ್ಲ ಎಂದು ಹೇಳಿದೆ.
ಕೋವಿಡ್-19 ಸೋಂಕು ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆಯೇ ಎಂದು ತಪಾಸಣೆ ಮಾಡಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ದಾಳಿ ನಡೆಸಬೇಕು ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ನೇತೃತ್ವದ ವಿಭಾಗೀಯ ಪೀಠ, ಇತ್ತೀಚೆಗೆ ನಗರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಸಂಸದ ಮತ್ತು ಅವರ ಬೆಂಬಲಿಗರು ಮಾಸ್ಕ್ ಧರಿಸದೆ ರ್ಯಾಲಿ ನಡೆಸಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕೋವಿಡ್-19 ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಅರ್ಜಿ ಸಲ್ಲಿಸಿದವರು ಅದಕ್ಕೆ ಪೂರಕವಾಗಿ ಫೋಟೋಗಳನ್ನು ನೀಡಿದ್ದರು. ಧಾರ್ಮಿಕ ಸ್ಥಳಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸರ್ಕಾರ ಇನ್ನೂ ತಪಾಸಣೆ ನಡೆಸಿಲ್ಲ. ಬೆಂಗಳೂರಿನ 1.30 ಕೋಟಿ ಜನತೆಯನ್ನು ನಿಭಾಯಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ನಿಯಮ ಸರಿಯಾಗಿ ಪಾಲನೆ ಮಾಡಲು ಕಟ್ಟುನಿಟ್ಟು ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
Advertisement