ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬೆಳಿಗ್ಗೆ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿಗಳು ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಸಂಜೆ ವೇಳೆಗೆ ವಾಪಸಾಗಲಿದ್ದಾರೆ.
ಮೊದಲು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಸಮೀಕ್ಷೆ ನಡೆಸಿ ಕಲಬುರಗಿ ಆಗಮಿಸಲಿದ್ದಾರೆ. ಅಲ್ಲಿ ಆ ಎರಡು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಬಳಿಕ ಅಲ್ಲಿಂದ ವಿಜಯಪುರ ಜಿಲ್ಲೆಯ ಸಮೀಕ್ಷೆ ನಡೆಸಿ ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ರಾಯಚೂರು ಜಿಲ್ಲೆಯ ಸಮೀಕ್ಷೆ ನಡೆಸಿ ಬಳ್ಳಾರಿಯ ತೋರಣಗಲ್ಲಿಗೆ ವಾಪಸಾಗಲಿದ್ದಾರೆ. ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
Advertisement