ರಾಜ್ಯಕ್ಕೆ ರೂ.10,000 ಕೋಟಿ ವಿಶೇಷ ನೆರೆ ಪ್ಯಾಕೇಜ್ ನೀಡಿ: ಪ್ರಧಾನಿ ಮೋದಿಗೆ ಸಿಎಂ ಯಡಿಯೂರಪ್ಪ ಪತ್ರ

ರಾಜ್ಯದಲ್ಲಿ ಕಳೆದ 2 ತಿಂಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಒಟ್ಟಾರೆ ರೂ.21,609 ಕೋಟಿಗಳಷ್ಟು ನಷ್ಟವುಂಟಾಗಿದ್ದು, ತುರ್ತು ಪರಿಹಾರವಾಗಿ ರೂ. 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ ನೀಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ತಿಂಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಒಟ್ಟಾರೆ ರೂ.21,609 ಕೋಟಿಗಳಷ್ಟು ನಷ್ಟವುಂಟಾಗಿದ್ದು, ತುರ್ತು ಪರಿಹಾರವಾಗಿ ರೂ. 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ ನೀಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ. 

ಮೋದಿ ಅವರು ಅ.16ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ, ಮಳೆ ಹಾನಿ ಕುರಿತು ಚರ್ಚೆ ನಡೆಸಿ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು.

ಇದಾದ ಮರುದಿನವೇ ಅ.17ರಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಎದುರಾಗಿರುವ ಭೀಕರ ಪರಿಸ್ಥಿತಿಯನ್ನು ಪರಿಗಣಿಸಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳು, ರೈತರು, ಪರಿಹಾರ, ಪುನರ್ವಸತಿ ನಿರ್ಮಾಣ ಕ್ರಮಗಳ ಕೈಗೊಳ್ಳಲು ರಾಜ್ಯಕ್ಕೆ ರೂ.10,000 ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಮುಖ್ಯಮಂತ್ರಿ ಅವರು ಬರೆದಿರುವ ಪತ್ರದಲ್ಲಿ ರಾಜ್ಯದಲ್ಲಿ ಇದುವರೆಗೂ 3 ಹಂತದಲ್ಲಿ ಅತಿವೃಷ್ಟಿಹಾಗೂ ನೆರೆ ಹಾನಿ ಉಂಟಾಗಿದೆ. ಆಗಸ್ಟ್‌ನಿಂದ ಸೆಪ್ಟೆಂಬರ್‌ 15ರವರೆಗೆ ಮೊದಲ ಹಂತದಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತಕ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಆದ ಮಳೆ ಹಾನಿಯಿಂದ ರೂ.9,441 ಕೋಟಿ ನಷ್ಟವಾಗಿದೆ.

ಸೆಪ್ಟಂಬರ್‌ ಉಳಿದಾರ್ಧದಲ್ಲಿ ವಿವಿಧ ಜಿಲ್ಲೆಗಳಲ್ಲಿ ಉಂಟಾದ 2ನೇ ಹಂತದ ನೆರೆಯಿಂದ ರೂ. 5,668 ಕೋಟಿ ಹಾಗೂ ಪ್ರಸ್ತುತ ಅ.10ರಿಂದ ಕರಾವಳಿ ಮತ್ತು ಉತ್ತರ ಕರ್ನಾಟಕದ ಹಲವೆಡೆ ಉಂಟಾಗಿರುವ 3ನೇ ಹಂತದ ಪ್ರವಾಹ ಪರಿಸ್ಥಿತಿಯಿಂದ ಅಂದಾಜು ರೂ. 6,500 ಕೋಟಿಯಷ್ಟು ಹಾನಿಯಾಗಿದೆ.

ಒಟ್ಟಾರೆ ಈ ಮೂರೂ ಅವಧಿಯಲ್ಲಿ 30 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ರಸ್ತೆ, ಕಾಲುವೆಗಳು, ಮೇಲ್ಸೇತುವೆ, ಶಾಲೆ, ಅಂಗನವಾಡಿ ಕಟ್ಟಡ, ವಿದ್ಯುತ್‌ ಸಂಪರ್ಕ ಸೇರಿದಂತೆ ಮತ್ತಿತರ ಮೂಲ ಸೌಕರ್ಯ ವ್ಯವಸ್ಥೆ ಹಾಳಾಗಿದೆ. 

ಇದರಿಂದ ಒಟ್ಟಾರೆ ರಾಜ್ಯದಲ್ಲಿ ರೂ.21,609 ಕೋಟಿ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ. ಹಾಗಾಗಿ ತುರ್ತು ನೆರೆ ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ರು. ವಿಶೇಷ ಪ್ಯಾಕೇಜ್‌ ನೀಡುವಂತೆ ಮನವಿ ಮಾಡಿದ್ದಾರೆ. ಸೆ.15ರ ನಂತರ ಉಂಟಾಗಿರುವ ಮಳೆ ಹಾನಿ ಹಾಗೂ ನಷ್ಟಕ್ಕೆ ಸಂಬಂಧಿಸಿದ ಹೆಚ್ಚುವರಿ ವರದಿಯನ್ನು ಅಕ್ಟೋಬರ್‌ ಮಾಸಾಂತ್ಯದ ವೇಳೆಗೆ ಸಲ್ಲಿಸಲಾಗುವುದು ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

ಹಾನಿಯಾದ ಮನೆಗೆ ರೂ.10 ಸಾವಿರ ಪರಿಹಾರ
ನೆರೆ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ತೆರೆಯಲಾಗಿದೆ. ಮನೆ ಕುಸಿತ, ನೀರು ನುಗ್ಗಿ ವಸ್ತುಗಳು ಹಾನಿಯಾಗಿರುವ ಸಂತ್ರಸ್ತರಿಗೆ ಪ್ರತಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ರೂ.10 ಸಾವಿರ ತಾತ್ಕಾಲಿಕ ಪರಿಹಾರ ನೀಡಲಾಗುತ್ತಿದೆ. 

ಇದಲ್ಲದೆ, ಸಂಪೂರ್ಣ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ಪ್ರತಿ ಮನೆಗೆ ರೂ.5 ಲಕ್ಷ ಪರಿಹಾರ ಹಾಗೂ ಹೆಚ್ಚಿನ ಹಾನಿ ಮತ್ತು ಭಾಗಶಃ ಹಾನಿಗೊಳಗಾದ ಮನೆಗಳಿಗೆ ರೂ.3 ಲಕ್ಷ ಭಾಗಶಃ ಹಾನಿಗೊಳಗಾಗಿರುವ ಮನೆಗಳ ದುರಸ್ತಿಗೆ ರೂ.50 ಸಾವಿರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಆದರೆ, 2019 ಮಚ್ಚು 2020 ಎರಡೂ ವರ್ಷ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಹೆಚ್ಚಿನ ಆರ್ಥಿಕ ಹೊರೆ ಅನುಭವಿಸುವಂತಾಗಿದೆ. ಕೋವಿಡ್ ನಿಂದಾಗಿ ಉಂಟಾಗಿರುವ ಪರಿಸ್ಥಿತಿ ನಿಭಾಯಿಸಲು ಎಸ್'ಡಿಆರ್'ಎಫ್ ಅಡಿಯ ಭಾಗಶಃ ಅನುದಾನ ಹಾಗೂ ರಾಜ್ಯ ಬಜೆಟ್ ನ ಸಾಕಷ್ಟು ಅನುದಾನವನ್ನು ಬಳಸಲಾಗಿದೆ. ಹೀಗಾಗಿ ರಾಜ್ಯ ಅತ್ಯಂತ ಕಠಿಣ ಆರ್ಥಿಕ ಪರಿಸ್ಥಿತ ಎದುರಿಸುತ್ತಿದೆ. ಹೀಗಾಗಿ ರೂ.10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com