ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರ ಆಯೋಗಕ್ಕೆ ಬಿಟ್ಟದ್ದು: ಹೈಕೋರ್ಟ್

ಕಾನೂನಿನ ಪ್ರಕಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕಾನೂನಿನ ಪ್ರಕಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.

ಆದಾಗ್ಯೂ,  ತೀರ್ಪನ್ನು ಕಾಯ್ದಿರಿಸಿದ್ದು, ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗ ಯಾವಾಗಬೇಕಾದರೂ ನಿರ್ಧಾರ ಕೈಗೊಳ್ಳಬಹುದೆಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಾಧೀಶ ಅಶೋಕ್ ಕೆ. ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯ ಕೆ. ಸಿ. ಕೊಂಡಯ್ಯ ಮತ್ತಿತರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ವಾದಗಳನ್ನು ಆಲಿಸಿದ ನ್ಯಾಯಾಲಯ, ಬಿಹಾರ ವಿಧಾನಸಭಾ ಚುನಾವಣೆ ನಡೆಯುವಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ , ಈ ಸಂಬಂಧ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿತು.

ನಿರ್ಧಾರ ತಾಳುವ ಮುನ್ನ ಆಯೋಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆದರೆ, ಏಕಪಕ್ಷೀಯವಾಗಿ ಚುನಾವಣೆ ನಡೆಸಲು ಮುಂದಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಬಗ್ಗೆ ಕಳವಳಗೊಂಡಿರುವುದಾಗಿ ಅಡ್ವೋಕೆಟ್ ಜನರಲ್ ಪ್ರಭುಲಿಂಗ ಕೆ ನಾವಡ್ಗಿ ಹೇಳಿದರು.

ಇದಲ್ಲದೇ, ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಮತ್ತು ಬೆಳಗಾವಿ ಲೋಕಸಭಾ ಉಪ ಚುನಾವಣೆ ನಡೆಯಬೇಕಾಗಿದೆ. ಈ ಮಧ್ಯೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ಚುನಾವಣಾ ಆಯುಕ್ತ ಬಿ ಬಸವರಾಜ್, 
ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ನಾವು ಸಿದ್ದರಿದ್ದೇವೆ. ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಕಾನೂನು ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ನಿಯಮಿತ ಸಂಖ್ಯೆಯ ಚುನಾವಣಾ ಸಿಬ್ಬಂದಿಯನ್ನು ಹೊಂದಲು ಎದುರು ನೋಡುತ್ತಿದ್ದೇವೆ. ಕೋವಿಡ್ -19 ಕಾರಣ ಬೇರೆ ಜಿಲ್ಲೆಯವರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವುದಿಲ್ಲ, ಹಂತಗಳಲ್ಲಿ ಚುನಾವಣೆ ನಡೆಸಲು ಯೋಜಿಸುತ್ತಿದ್ದೇವೆ. ಪ್ರತಿಯೊಂದು ಜಿಲ್ಲೆಯನ್ನು ಎರಡು ಅಥವಾ ಮೂರು ವಲಯಗಳನ್ನಾಗಿ ವಿಭಾಗಿಸಿ, ಆಯಾ ಜಿಲ್ಲೆಯ ನಿಗದಿತ ಸಂಖ್ಯೆಯ ಸಿಬ್ಬಂದಿಯನ್ನು ಬಳಸಿಕೊಂಡು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com