ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 5 ತಿಂಗಳುಗಳಿಂದ ಬಂದ್ ಮಾಡಲಾಗಿದ್ದ ಕೆ.ಆರ್.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಸೋಮವಾರ ತಡರಾತ್ರಿಯಿಂದಲೇ ವ್ಯಾಪಾರ ವಹಿವಾಟುಗಳು ಮತ್ತೆ ಆರಂಭಗೊಂಡಿದೆ.
ರಾಜಧಾನಿಯ ಸುತ್ತಮುತ್ತಲ ಭಾಗಗಳಿಂದ ರೈತರು ತಾವು ಬೆಳೆದ ತರಕಾರಿ, ಸೊಪ್ಪು ಹಾಗೂ ಹೂವುಗಳನ್ನು ಹೊತ್ತು ಮಾರುಕಟ್ಟೆಗೆ ಆಗಮಿಸಿದ್ದರು. ಸಗಟು ವ್ಯಾಪಾರಿಗಳೂ ಎಂದಿನಂತೆ ವ್ಯಾಪಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮಂಗಳವಾರದಿಂದ ಮಾರುಕಟ್ಟೆಗಳನ್ನು ಆರಂಭಿಸಲು ಬಿಬಿಎಂಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಎರಡೂ ಮಾರುಕಟ್ಟೆಗಳ ವ್ಯಾಪಾರಿಗಳು ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳೊಂದಿಗೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ಮಾರುಕಟ್ಟೆಗಳನ್ನು ಮಂಗಳವಾರದಿಂದ ವ್ಯಾಪಾರಕ್ಕೆ ಮುಕ್ತಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಳಿಗೆಗಳ ಸ್ವಚ್ಛತೆಗೆ ಆವಕಾಶ ನೀಡಲಾಗಿದೆ. ಮಾರುಕಟ್ಟೆಯನ್ನು ಸೋಂಕು ನಿವಾರಕ ದ್ರಾವಣದಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಳಿಗೆಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸ್ಥ ಗುರುತಿಸಲಾಗಿದೆ. ವ್ಯಾಪಾರದ ವೇಳೆ ವ್ಯಾಪಾರಿಗಳು ಹಾಗೂ ಗ್ರಾಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತಿ ಮಳಿಗೆ ಎದುರು ಸ್ಯಾನಿಟೈಸರ್ ವ್ಯವಸ್ತೆ ಮಾಡುವಂತೆ ವ್ಯಾಪಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪ್ರಥಮ ಹಂತದಲ್ಲಿ ಮಾರುಕಟ್ಟೆಗಳ ಮಳಿಗೆಗಳಲ್ಲಿ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೀದಿ, ರಸ್ತೆ ಬದಿ ವ್ಯಾಪಾರ ಮಾಡದಂತೆ ಸೂಚಿಸಲಾಗಿದ್ದು, ವ್ಯಾಪಾರಿಗಳು ಇದಕ್ಕೆ ಒಪ್ಪಿದ್ದಾರೆ. ಇನ್ನೂ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ನಿಯಮ ಪಾಲನೆ ಮೇಲೆ ನಿಗಾವಹಿಸಲು 15 ಮಂದಿ ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement