ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ: ಲಕ್ಷ್ಮಣ ಸವದಿ

ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಉಪಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ
Updated on

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಉಪಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 

ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಸವದಿ,ಕೆ.ಎಸ್.ಆರ್.ಟಿ.ಸಿ.ಯ 34, ಬಿ.ಎಂ.ಟಿ.ಸಿ.ಯ 3, ಈಶಾನ್ಯ ಸಾರಿಗೆಯ 20 ಮತ್ತು ವಾಯುವ್ಯ ಸಾರಿಗೆಯ 3 ಬಸ್ಸುಗಳು ಸೇರಿದಂತೆ ಒಟ್ಟು ಅರವತ್ತು ಬಸ್ಸುಗಳು ಪ್ರತಿಭಟನಾಕಾರರ ದುಷ್ಕೃತ್ಯಕ್ಕೀಡಾಗಿ ಹಾನಿಗೊಂಡಿವೆ. ಇದರಲ್ಲಿ ಕೆಲವೊಂದು ವೋಲ್ವೋದಂಥ ದುಬಾರಿ ಬಸ್ಸುಗಳೂ ಸೇರಿವೆ. ಬಸ್ಸು ಹಾನಿ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಬಸ್ಸುಗಳೆಂದರೆ ಸಾರಿಗೆ ವ್ಯವಸ್ಥೆಯ ಆತ್ಮಗಳಿದ್ದಂತೆ. ಈ ಬಸ್ಸುಗಳಿಂದಲೇ ನಮ್ಮ ಲಕ್ಷಾಂತರ ಸಾರಿಗೆ ನೌಕರರ ಬದುಕಿನ ರಥವೂ ಸಾಗುತ್ತದೆ ಎಂಬುದನ್ನು ನಮ್ಮ ನೌಕರರು ಅರ್ಥಮಾಡಿಕೊಳ್ಳಬೇಕು. ಹಿಂಸೆಯಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಬಸ್ಸುಗಳಿಗೆ ಅಥವಾ ಬಸ್ ನಿಲ್ದಾಣಗಳಿಗೆ ಹಾನಿಗೊಳಿಸಿದರೆ ನಮ್ಮ ನೌಕರರು ತಮ್ಮ ತಲೆಯ ಮೇಲೆ ತಾವೇ ಕಲ್ಲು ಹಾಕಿ ಕೊಂಡಂತಾಗುತ್ತದೆ. ಇಂಥವರ ವಿರುದ್ಧ ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಮುಷ್ಕರದಿಂದಾಗಿ ಬಸ್ಸುಗಳ ಸಂಚಾರ ಸ್ಥಗಿತಗೊಂಡು ಈಗಾಗಲೇ 4 ಸಾರಿಗೆ ನಿಗಮಗಳಿಂದ ಒಟ್ಟು ಬರಬೇಕಾಗಿದ್ದ 152 ಕೋಟಿ ರೂ. ಆದಾಯ ಬರದೇ ನಷ್ಟವಾಗಿದೆ. ಇದರಲ್ಲಿ ಕೆಎಸ್ಆರ್ ಟಿಸಿಗೆ  70 ಕೋಟಿ ರೂ, ಬಿಎಂಟಿಸಿಗೆ 20 ಕೋಟಿ ರೂ, ಈಶಾನ್ಯ ಸಾರಿಗೆ ನಿಗಮಕ್ಕೆ 31.5 ಕೋಟಿ ರೂ, ವಾಯುವ್ಯ ಸಾರಿಗೆ ನಿಗಮಕ್ಕೆ 30.5 ಕೋಟಿ ರೂ. ನಷ್ಟು ಆದಾಯಗಳಿಗೆ ಹೊಡೆತ ಬಿದ್ದಿದೆ. ಈಗಾಗಲೇ ಅನೇಕ ನೌಕರ ಕುಟುಂಬದವರು ತಾವು ಮುಷ್ಕರದಿಂದ ಬೇಸತ್ತಿರುವದಾಗಿ ತಿಳಿಸಿದರೂ ಸಹ ಕೆಲವು ಪಟ್ಟಭದ್ರರು ಈ ಮುಷ್ಕರವನ್ನು ಮುಂದುವರಿಸುತ್ತಾ ಸಾರ್ವಜನಿಕರಿಗೆ ಅಷ್ಟೇ ಅಲ್ಲ ನಮ್ಮ ನೌಕರ ಬಾಂಧವರಿಗೂ ಕೂಡ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇಂಥವರ ಕುಮ್ಮಕ್ಕಿಗೆ ಬಲಿಯಾಗಬಾರದು ಎಂದು ಸವದಿ ಮನವಿ ಮಾಡಿದ್ದಾರೆ.

ಇಂದು ನಮ್ಮ ಕರೆಗೆ ಓಗುಟ್ಟು ಹಲವಾರು ಸಾರಿಗೆ ನೌಕರರು ಕರ್ತವ್ಯಕ್ಕೆ ಮರಳಿರುವುದರಿಂದ ಹಲವು ಕಡೆಗಳಲ್ಲಿ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಯಿತು. ಇಂದು ಸಂಜೆಯ ವೇಳೆಗೆ 3200 ಗಿಂತಲೂ ಹೆಚ್ಚು ಬಸ್ಸುಗಳು ಸಂಚರಿಸಿದವು. ಹೀಗೆ ಕರ್ತವ್ಯಕ್ಕೆ ಆಗಮಿಸಿದ ನಮ್ಮ ನೌಕರ ಮಿತ್ರರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿ ಹಬ್ಬದ ಸಿಹಿಯನ್ನು ವಿತರಿಸಿ ಶುಭಾಶಯ ಕೋರಿದ್ದೇವೆ .ಈಗಲೂ ನಮ್ಮ ಕುಟುಂಬದ ಸದಸ್ಯರಂತೆ ಇರುವ ನೌಕರ ಮಿತ್ರರ ಮೇಲೆ ನಾನು ವಿಶ್ವಾಸ ಕಳೆದುಕೊಂಡಿಲ್ಲ. ನಮ್ಮ ಸಾರಿಗೆ ನೌಕರ ಬಾಂಧವರು ವಾಸ್ತವ ಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಂಡು ಕೂಡಲೇ ಎಲ್ಲರೂ ಕೆಲಸಕ್ಕೆ ಹಾಜರಾಗುತ್ತಾರೆ ಎಂಬ ನಿರೀಕ್ಷೆಯಿರುವುದಾಗಿ ಲಕ್ಷ್ಮಣ ಸವದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com