1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ನಿಗದಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ: ಸುರೇಶ್ ಕುಮಾರ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

1 ರಿಂದ 9ನೇ ತರಗತಿಯ ಮಕ್ಕಳನ್ನು ಅವರ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರು ತಿಳಿಸಿದ್ದಾರೆ.

ಶಾಲೆಗಳು ತಮ್ಮ ಫಲಿತಾಂಶ ಪ್ರಕ್ರಿಯೆಯನ್ನು ಏಪ್ರಿಲ್ 30 ರೊಳಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ಬೇಸಿಗೆ ರಜೆ ಪ್ರಾರಂಭವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಮಕ್ಕಳ ಕಲಿಕೆಯ ಸಾಮರ್ಥ್ಯವನ್ನು ನಿರ್ಣಯಿಸಲು ಮಾತ್ರ ಮೌಲ್ಯಮಾಪನ ಮತ್ತು ಫಲಿತಾಂಶ ಒಂದು ಸಾಧನವಾಗಿರಬೇಕು ಎಂದು ಸಾರ್ವಜನಿಕ ಶಿಕ್ಷಣದ ಆಯುಕ್ತ ಅನ್ಬು ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 21 ರಿಂದ ಜುಲೈ 5 ರವರೆಗೆ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ತಿಳಿಸಿದೆ.

ಜುಲೈ 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 1 ರಿಂದ 8 ನೇ ತರಗತಿಯ ಮಕ್ಕಳಿಗೆ (7 ಮತ್ತು 8 ನೇ ತರಗತಿ ಹೊಂದಿರುವ ಪ್ರಾಥಮಿಕ ಶಾಲೆಗಳಿಗೆ) ಮೇ 1 ರಿಂದ ಜೂನ್ 14 ರವರೆಗೆ ಬೇಸಿಗೆ ರಜೆ ಇರುತ್ತದೆ. ಅವರ ಮುಂದಿನ ಶೈಕ್ಷಣಿಕ ವರ್ಷ ಜೂನ್ 15 ರಿಂದ ಪ್ರಾರಂಭವಾಗಲಿದೆ.

8 ಮತ್ತು 9 ನೇ ತರಗತಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮೇ 1 ರಿಂದ ಜುಲೈ 15 ರವರೆಗೆ ಬೇಸಿಗೆ ರಜೆ ಇರುತ್ತದೆ. ಪ್ರೌಢ ಶಾಲಾ ಶಿಕ್ಷಕರಿಗೆ ಜೂನ್ 15 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com