ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ
ಬೆಂಗಳೂರು: ಶ್ರಾವಣ ಮಾಸ ಆರಂಭವಾಗಿದ್ದು, ಸಾಲುಸಾಲು ಹಬ್ಬಗಳು ಹಿಂದೂಗಳಿಗೆ ಎದುರಾಗಿರುವುದರಿಂದ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಪ್ಪಿಸಲು ಬೆಂಗಳೂರಿನ ಪ್ರತಿವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿರುವುದಾಗಿ ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಅಮೆರಿಕಾದಲ್ಲಿ ಕೊವಿಡ್ 3ನೇ ಅಲೆಯಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನೇಕ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿದ್ದೇನೆ. ಐದಾರು ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೋಡುತ್ತೇನೆ. ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಅದು ರಾಜ್ಯದಲ್ಲಿ ಕಾಣಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಗಸ್ಟ್ 15 ರ ನಂತರ ಬೆಂಗಳೂರಿನಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ಬೆಡ್ ಗಳನ್ನು ವಾಪಸ್ ನೀಡಲಾಗಿದೆ. ಅಗತ್ಯ ಬಿದ್ದರೆ ಬೆಡ್ ಗಳನ್ನು ವಾಪಸ್ ಪಡೆಯುತ್ತೇವೆ. ನಮ್ಮ ಆದೇಶದಲ್ಲಿಯೇ ಅದನ್ನು ತಿಳಿಸಿದ್ದೇವೆ ಎಂದು ಅಶೋಕ್ ತಿಳಿಸಿದರು.