ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.
ಬಸವರಾಜ ಬೊಮ್ಮಾಯಿ ಅವರು ಇಂದು ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ ಆದ ಬಳಿಕ ಬೊಮ್ಮಾಯಿ ಅವರ ಮೊದಲ ಬಾಗಲಕೋಟೆ ಪ್ರವಾಸ ಇದಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ಪಿ.ಸಿ. ಗದ್ದಿಗೌಡರ್ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ಮತ್ತಿತರರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ