ಬೆಳೆ ಹಾನಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಸಾಕಷ್ಟು ಬೆಳೆ ನಾಶವಾಗಿದೆ. ಇದಕ್ಕೆ ಪರಿಹಾರ ನೀಡುವ ಸಲುವಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಪ್ರಥಮ ಬಾರಿಗೆ ಬೆಳೆ ಹಾನಿ ಬಗ್ಗೆ ಸರ್ಕಾರದಿಂದ ಪ್ರತಿನಿತ್ಯ ಆಯಾ ಜಿಲ್ಲೆ ಮತ್ತು ತಾಲ್ಲೂಕುವಾರು ಬೆಳೆ ಹಾನಿ ಸರ್ವೆ ನಂತರ ದತ್ತಾಂಶವನ್ನು ಅಪ್ ಲೋಡ್ ಆದ ತಕ್ಷಣ ಬೆಳೆ ಪರಿಹಾರ ದೊರೆಯುವ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು.
ಕೋವಿಡ್ ಮೂರನೇ ಅಲೆ ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸದ್ಯ ಇದರ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಓಮಿಕ್ರಾನ್ ಹರಡದಂತೆ ನಿಯಂತ್ರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸರಿಯಾದ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 13 ರಿಂದ 24ರವರೆಗೆ ನಡೆಯಲಿದೆ. ಎರಡು ವರ್ಷಗಳ ನಂತರ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಮುಂದೆ ಉತ್ತರ ಕರ್ನಾಟಕ ಭಾಗದಲ್ಲಿ ಆಗಬೇಕಾಗಿರುವಂತಹ ಅಭಿವೃದ್ಧಿ ಕಾರ್ಯಗಳು, ನೀರಾವರಿ ಯೋಜನೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ