ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ ಅಲಿಯಾಸ್ ರೋಹಿತ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಇಂದಿರಾನಗರ ಠಾಣಾ ವ್ಯಾಪ್ತಿಯ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರ 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಲೋಹಿತ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು ಶರಣಾಗುವಂತೆ ಸೂಚಿಸಿದ್ದರು. ಆದರೂ ಆರೋಪಿ ಶರಣಾಗದೆ ಮುಖ್ಯ ಪೇದೆ ಸೈಯದ್ ಮೊಯೀನುಲ್ಲಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ.
ಆರೋಪಿ ಹಲ್ಲೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಆರೋಪಿ ಲೋಹಿತ್ನ ಬಲಗಾಲಿಗೆ ಗುಂಡೇಟು ಬಿದ್ದಿದೆ ಎಂದು ತಿಳಿದುಬಂದಿದೆ.
ಆರೋಪಿ ಲೋಹಿತ್ ವಿರುದ್ಧ ಕೋಲಾರ, ಬೆಂಗಳೂರು ವ್ಯಾಪ್ತಿಯಲ್ಲಿ 17 ಪ್ರಕರಣಗಳು ದಾಖಲಾಗಿದ್ದು, ಹೆಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯಲ್ಲಿ ರೌಡಿಶೀಟರ್ ತೆರೆಯಲಾಗಿದೆ.
Advertisement