ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣೆ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಿದ್ದಾರೆ.
ಇಬ್ಬರು ನಾಯಕರು ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಜತೆ ಮಂಗಳವಾರ (ಜುಲೈ 20) ಚರ್ಚೆ ನಡೆಸಲಿದ್ದಾರೆ.
ಉಭಯ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣಿಸಿದ್ದು, ನಿನ್ನೆ ಸಂಜೆ ದೆಹಲಿ ತಲುಪಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಸಿದ್ದರಾಮ್ಯ ಅವರು ದೆಹಲಿಗೆ ತೆರಳಿದ್ದರೆ, ಡಿ.ಕೆ.ಶಿವಕುಮಾರ್ ಅವರು ಸಂಜೆ 7 ಗಂಟೆಗೆ ದೆಹಲಿಗೆ ತೆರಳಿದ್ದಾರೆ.
ಕೆಪಿಸಿಸಿ ಪುನಾರ್ರಚನೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ಹಾಗೂ 25 ಎಂಎಲ್ ಸಿ ಸೀಟುಗಳ ಚುನಾವಣೆ ಸಂಬಂಧ ಚರ್ಚೆ ನಡೆಸಲು ಉಭಯ ನಾಯಕರು ದೆಹಲಿಗೆ ಭೇಟಿ ನೀಡಿದ್ದಾರೆಂದು ಹೇಳಲಾಗುತ್ತಿದೆ.
ಇದಲ್ಲದೆ, ಕಳೆದ 10 ವರ್ಷಗಳಿಂದ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ನಡೆದಿಲ್ಲ, ಹೀಗಾಗಿ ಕೆಪಿಸಿಸಿ ಪುನಾರಚನೆ ಕೂಡ ಪ್ರಮುಖ ಅಜೆಂಡಾವಾಗಿದೆ ಎಂದು ತಿಳಿದುಬಂದಿದೆ.
Advertisement