ಅಧಿಕಾರಿಗಳ ಸಭೆಯಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಬೈರತಿ ಬಸವರಾಜ್, ಎಂಟಿಬಿ ನಾಗರಾಜ್
ಅಧಿಕಾರಿಗಳ ಸಭೆಯಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಬೈರತಿ ಬಸವರಾಜ್, ಎಂಟಿಬಿ ನಾಗರಾಜ್

ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಸುಧಾರಣೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ 

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು, ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು, ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಪೌರಾಡಳಿತ, ನಗರಾಭಿವೃದ್ಧಿ ಹಾಗೂ ಕೈಗಾರಿಕಾ ಸಚಿವತ್ರಯರ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಕೈಗಾರಿಕೆಗಳ ಮೇಲೆ ಹಾಕಲಾಗುತ್ತಿರುವ  ತೆರಿಗೆಗಳು ಬಹಳ ಹೆಚ್ಚಾಗಿವೆ. ಖಾಲಿ ಇರುವ ಜಾಗದ ಮೇಲೂ ಬಹಳಷ್ಟು ತೆರಿಗೆ ಹಾಕಲಾಗುತ್ತಿದೆ. ಅಲ್ಲದೇ, ತೆರಿಗೆ ಪದ್ಧತಿಯಲ್ಲಿ ರಾಜ್ಯಾದ್ಯಂತ ಪಾರದರ್ಶಕ ಹಾಗೂ ಒಂದೇ ರೀತಿಯ ತೆರಿಗೆ ಪದ್ಧತಿ ಅಳವಡಿಸಿಕೊಳ್ಳುವುದು ಬಹಳ ಅವಶ್ಯಕ. ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಪದ್ಧತಿ ಅನುಷ್ಠಾನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಶೀಘ್ರ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಮುಂದಿನ ವಾರ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರನ್ನೊಳಗೊಂಡ ಸಭೆ ಆಯೋಜಿಸಬೇಕು, ಆ ಸಭೆಯಲ್ಲಿ ರಾಜ್ಯಾದ್ಯಂತ ಕೈಗಾರಿಕೆಗಳಿಂದ ಬಾಕಿ ಇರುವ ತೆರಿಗೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಒಂದು ಬಾರಿಯ ವಿಶೇಷ ಯೋಜನೆಯನ್ನು ಘೋಷಿಸುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಬಿಎ ಬಸವರಾಜ್ ಮಾತನಾಡಿ, ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ ಇನ್ನೊಂದು ಸ್ಲಾಬನ್ನು ರಚಿಸುವ ನಿಟ್ಟಿನಲ್ಲಿ ಹಳೆಯಲ್ಲಿ ತೆರಿಗೆಯನ್ನು ಒನ್ ಟೈಂ ಸೆಟಲ್ ಮೆಂಟ್ ಬಗ್ಗೆ ಹಾಗೂ ತೆರಿಗೆಯಲ್ಲಿ ರಿಬೇಟ್ ಮಾಡುವ ನಿಟ್ಟಿನಲ್ಲಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದಿಡಲಾಗುವುದು ಎಂದು ತಿಳಿಸಿದರು.

ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕೈಗಾರಿಕೆಗಳಿಗೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ತೀವ್ರ ತೊಂದರೆ ಆಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯವಿರುವಂತಹ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಫ್ ಕೆಸಿಸಿಐ ಅಧ್ಯಕ್ಷ  ಪೆರಿಕಾಲ್ ಎಂ ಸುಂದರ್, ತೆರಿಗೆ ಸುಧಾರಣೆಯಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಸಚಿವರುಗಳಿಗೆ ಮನವಿ ಸಲ್ಲಿಸಿದರು.

Related Stories

No stories found.

Advertisement

X
Kannada Prabha
www.kannadaprabha.com