ಭಾರೀ ಮಳೆಗೆ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ -4 ಮುಳುಗಿರುವುದು
ಭಾರೀ ಮಳೆಗೆ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ -4 ಮುಳುಗಿರುವುದು

ಬೆಳಗಾವಿಯಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ, ಜನರು ತತ್ತರ: ನಾಳೆ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ

ಧಾರಾಕಾರ ಮಳೆಗೆ ಕುಂದಾನಗರಿ ಬೆಳಗಾವಿ ತತ್ತರಿಸಿ ಹೋಗಿದೆ, ಉತ್ತರ ಕರ್ನಾಟಕ್ಕೆ ಮಳೆಯ ಪ್ರವಾಹ ತೀವ್ರ ಮಟ್ಟದಲ್ಲಿ ಹೊಡೆತ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಾಳೆ‌ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಗಳನ್ನು ಅವಲೋಕಿಸಲಿದ್ದಾರೆ. 
Published on

ಬೆಂಗಳೂರು: ಧಾರಾಕಾರ ಮಳೆಗೆ ಕುಂದಾನಗರಿ ಬೆಳಗಾವಿ ತತ್ತರಿಸಿ ಹೋಗಿದೆ, ಉತ್ತರ ಕರ್ನಾಟಕ್ಕೆ ಮಳೆಯ ಪ್ರವಾಹ ತೀವ್ರ ಮಟ್ಟದಲ್ಲಿ ಹೊಡೆತ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಾಳೆ‌ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಗಳನ್ನು ಅವಲೋಕಿಸಲಿದ್ದಾರೆ. 

ಅತಿವೃಷ್ಟಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಉಸ್ತುವಾರಿಗಳಿಂದ ಮಳೆ ಹಾನಿ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಸಚಿವರುಗಳಿಗೆ ತಮ್ಮ ಉಸ್ತುವಾರಿ ಜಿಲ್ಲೆಯಲ್ಲಿಯೇ ಇರುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇಂದು ಬೆಳಗ್ಗೆಯೂ ಸಹ ಅಧಿಕ ಮಳೆಯಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲೆಗಳಲ್ಲಿಯೇ ಉಳಿದುಕೊಂಡು ಅಲ್ಲಿಗೆ ಅಗತ್ಯವಿರುವ ನೆರವು ನೀಡುವಂತೆ, ಪರಿಸ್ಥಿತಿ ಅವಲೋಕಿಸುವಂತೆ ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ ಅಪಾರ ಹಾನಿ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಆಸ್ತಿ-ಪಾಸ್ತಿ ನಷ್ಟವಾಗಿದೆ. ಜಿಲ್ಲೆಯಲ್ಲಿ ಆದ ನಷ್ಟಗಳ ಬಗ್ಗೆ ನಿನ್ನೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾಹಿತಿ ಸಂಗ್ರಹಿಸಿದರು. ಜಿಲ್ಲೆಯ 5 ತಾಲ್ಲೂಕುಗಳ 51 ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಈ ಕುರಿತು ಈಗಾಗಲೇ ಪರಿಶೀಲನೆ ನಡೆಸಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿರುವ ಹಲವು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಸಂಪರ್ಕ ಕಳೆದುಕೊಂಡಿವೆ, ನದಿ ಪಾತ್ರದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಗಂಜಿ ಕೇಂದ್ರಗಳಲ್ಲಿ ಸುಮಾರು 2 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ. 2 ಎನ್ ಡಿ ಆರ್ ಎಫ್ ತಂಡ, ರಾಜ್ಯ ರಕ್ಷಣಾ ತಂಡ ಪರಿಹಾರ ಕಾರ್ಯಕ್ಕೆ ಧಾವಿಸಿದೆ. ಇದುವರೆಗೆ 224 ಮನೆಗಳಿಗೆ ಹಾನಿಯಾಗಿದ್ದು ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 

ಬೆಳಗಾವಿ ವ್ಯಾಪ್ತಿಯಲ್ಲಿ 36 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ, ಧಾರವಾಡ, ಕಾರವಾರ ವ್ಯಾಪ್ತಿಯಲ್ಲಿ 350ಕ್ಕೂ ಹೆಚ್ಚು ರಸ್ತೆಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿಗಾಗಿ 50 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com