ಮುಂದಿನ ವಾರದೊಳಗೆ ಸಂಪುಟ ವಿಸ್ತರಣೆ, ಸಂಭಾವ್ಯರ ಪಟ್ಟಿ ಬಗ್ಗೆ ಚರ್ಚೆ ಆಗಿಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ವಾರದೊಳಗೆ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆಗಿನ ಸಭೆಯಲ್ಲಿ ಸಂಪುಟ ವಿಸ್ತರಣೆಯ ಅಗತ್ಯತೆಯನ್ನು ವಿವರಿಸಿರುವುದಾಗಿ ತಿಳಿಸಿದರು.
ಮೊದಲ ವಾರದೊಳಗೆ ಕೇಂದ್ರ ವರಿಷ್ಠರ ಅನುಮತಿ ಪಡೆಯುತೇವೆ. ಇಂದಿನ ಸಭೆಯಲ್ಲಿ ಸಂಭಾವ್ಯರ ಪಟ್ಟಿಯ ಬಗ್ಗೆ ಚರ್ಚೆ ನಡೆಸಿಲ್ಲ. ಆದರೆ, ಈ ವಿಚಾರದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವ ಅಗತ್ಯವಿರುವುದಾಗಿ ತಿಳಿಸಿರುವುದಾಗಿ ಅವರು ಸುದ್ದಿಗಾರರಿಗೆ ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಬಿಜೆಪಿ ಹೈಕಮಾಂಡ್ ನಿಂದ ಭೇಟಿ ಸಮಯವನ್ನು ಬಯಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಸಂಪುಟ ವಿಸ್ತರಣೆ ಬೊಮ್ಮಾಯಿ ಮುಂದಿರುವ ಮೊದಲ ಸವಾಲಾಗಿದೆ. ಆಡಳಿತರೂಢ ಬಿಜೆಪಿಯೊಳಗಿನ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗಿದೆ. ವಲಸಿಗರು, ಹಳಬರು ಸೇರಿದಂತೆ ಸಚಿವರಾಗಲು ಅನೇಕ ಆಕಾಂಕ್ಷಿಗಳಾಗಿದ್ದಾರೆ. ತನ್ನ ನೇತೃತ್ವದ ಸರ್ಕಾರ ರಬ್ಬರ್ ಸ್ಟಾಂಪ್ ಅಲ್ಲ ಎಂದು ಸ್ಪಷ್ಟಪಡಿಸಿದ ಬೊಮ್ಮಾಯಿ, ನನ್ನ ಆಡಳಿತ ಬಿಜೆಪಿ ಸ್ಟಾಂಪ್ ಮಾತ್ರ ಆಗಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್-19 ಮತ್ತು ಪ್ರವಾಹ ಪರಿಸ್ಥಿತಿಯನ್ನು ವಿವರಿಸಿದ್ದೇನೆ. ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ