ಕೊರೋನಾ ಎಫೆಕ್ಟ್: ಆರೋಗ್ಯ ಕ್ಷೇತ್ರ ಬಲಪಡಿಸಲು 1,763 ವೈದ್ಯರ ನೇಮಕ
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುವ ಸಲುವಾಗಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸು ರಾಜ್ಯ ಸರ್ಕಾರ 1,763 ಮಂದಿ ವೈದ್ಯರನ್ನು ನೇಮಕ ಮಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ವೈದ್ಯರ ನೇಮಕಾತಿಯು ಮೂರು ಕಾರಣಗಳಿಂದಾಗಿ ಐಸಿಹಾಸಿಕವಾಗಿದೆ. ಇಲಾಖೆಯಿಂದ ಒಂದೇ ಸಲ 1763 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಇಲ್ಲಿಯವರೆಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದಲೇ ಪ್ರಥಮವಾಗಿ ನೇರ ನೇಮಕ ಮಾಡಿಕೊಳ್ಳಲಾಗಿದೆ. ಇಷ್ಟೊಂದು ದೊಡ್ಡ ಮಟ್ಟದ ನೇಮಕ ಪ್ರಕ್ರಿಯೆ 6 ತಿಂಗಳೊಳಗೆ ಮುಗಿದಿರುವುದೂ ದಾಖಲೆಯೇ ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಗುಣಮಟ್ಟದ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವುದಿಲ್ಲ ಎಂಬ ಭಾವನೆ ಜನರಲ್ಲಿದೆ. ಆದರೆ ವಾಸ್ತವವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹಳಷ್ಟು ಮೂಲಸೌಕರ್ಯವಿದೆ. ಹೊಸ ವೈದ್ಯರು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ, ಆ ಆಸ್ಪತ್ರೆಯನ್ನು ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಕಾರ್ಪೋರೇಟ್ ವಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸಿ, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಂಕಲ್ಪ ತೊಡಬೇಕು ಎಂದು ತಿಳಿಸಿದ್ದಾರೆ.
ವೈದ್ಯೋ ನಾರಾಯಣೋ ಹರಿ.. ಎಂದರೆ ವೈದ್ಯರೇ ದೇವರು. ಅನಾರೋಗ್ಯಕ್ಕೊಳಗಾದಾಗ ನೋವು ಕಡಿಮೆ ಮಾಡಿ, ಧೈರ್ಯ ಆತ್ಮವಿಶ್ವಾಸ ತುಂಬುವವರು ವೈದ್ಯರು. ಶ್ರೀಗಂಧದ ಕೊರಡು ತನ್ನನ್ನು ಸವೆಸಿಕೊಂಡಂತೆ ವೈದ್ಯರು ಸಮಾಜಕ್ಕಾಗಿ ಜೀವನ ಸವೆಸುತ್ತಾರೆ. ಎಲ್ಲಾ ವೈದ್ಯರು ತನು, ಮನ ಅರ್ಪಿಸಿ ಕೆಲಸ ಮಾಡಿದರೂ ಜನರು ವೈದ್ಯರ ಮೇಲೆ ವಿಶ್ವಾಸ ಕಡಿಮೆ ಮಾಡಿಕೊಂಡಿದ್ದಾರೆ. ಈ ಮನಸ್ಥಿತಿಯನ್ನು ಬದಲಿಸುವಂತೆ ಕೆಲಸ ಮಾಡಬೇಕು ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ