ಬೆಂಗಳೂರು: ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಔಷಧದ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೋವಿಡ್-19 ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.
ಚಿಕಿತ್ಸೆಗೆ ಬಳಸುವ ಲೈಪೊಸೋಮಲ್ ಆ್ಯಂಪೊಟೆರಿಸಿನ್ ಬಿ ಚುಚ್ಚುಮದ್ದು ಕೊರತೆಯಾಗಿದೆ ಎಂದು ತಿಳಿಸಿ ವಕೀಲ ಪಿ.ರವೀಂದ್ರ ಎಂಬುವವರು ಸಲ್ಲಿಸಿದ ಪತ್ರವನ್ನು ಉಲ್ಲೇಖಿಸಿದ ನ್ಯಾಯಪೀಠ, ಕೊರತೆ ಬಗ್ಗೆ ಸರ್ಕಾರಿ ವಕೀಲರಲ್ಲಿ ವಿವರಣೆ ಕೇಳಿತು.
ರಾಜ್ಯ ಸರ್ಕಾರಿ ವಕೀಲರು ಉತ್ತರಿಸಿ, ಚಿಕಿತ್ಸೆಗೆ ಬಳಸುವ ಔಷಧವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಬೇಕಿದೆ. ಔಷಧ ಲಭ್ಯವಾಗಿಸಲು ಪ್ರಯತ್ನ ನಡೆದಿದೆ ಎಂದು ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಔಷಧ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿತು.
Advertisement