ಕೋವಿಡ್ 'ಡೆತ್ ಆಡಿಟ್': ಶೀಘ್ರದಲ್ಲೇ ಮೈಸೂರಿಗೆ ತಜ್ಞರ ಸಮಿತಿ ಭೇಟಿ
ಮೈಸೂರು: ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮೈಸೂರಿನಲ್ಲಿ ಸೋಂಕು ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕೋವಿಡ್ ಡೆತ್ ಆಡಿಟ್ ಸಮಿತಿಯು ಶೀಘ್ರದಲ್ಲೇ ಮೈಸೂರಿಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಈ ಕುರಿತು ನಿನ್ನೆಯಷ್ಟೇ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಇಳಿಕೆಯಾಗದಿರುವುದಕ್ಕೆ ಕಾರಣವೇನು ಎಂಬುದನ್ನು ತಿಳಿಯುವ ಸಲುವಾಗಿ ತಜ್ಞರ ಸಮಿತಿ ರಚನೆ ಮಾಡಲಾಗುತ್ತಿದ್ದು, ಈ ಸಮಿತಿಯು ದೊಡ್ಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸಾವಿನ ಪ್ರಮಾಣ ಶೇ.3.85 ಇದ್ದು, ಪಾಸಿಟಿವಿಟಿ ಪ್ರಮಾಣ ಶೇ.5.48ರಷ್ಟಿದೆ. ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ, ಮೈಸೂರಿನಲ್ಲಿ ದೈನಂದಿನ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಇದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಸಾರಿ ಹಾಗೂ ಐಎಲ್ಐ ಪ್ರಕರಣಗಳ ಮೇಲೆ ಹೆಚ್ಚಿನ ಕಣ್ಗಾವಲಿರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೋಂ ಐಸೋಲೇಷನ್ ನಲ್ಲಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಸೋಮವಾರದ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 4,351 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ ಶೇ.61 (2,668)ರಷ್ಟು ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆಂದು ತಿಳಿದುಬಂದಿದೆ.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಚಿವ ಸುಧಾಕರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಹೋಂ ಐಸೋಲೇಷನ್ ನಲ್ಲಿರುವವರು ಸರ್ಕಾರದ ಮಾನದಂಡಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸುವಂತೆ ಹಾಗೂ ಸೂಕ್ತ ವ್ಯವಸ್ಥೆಗಳಿಲ್ಲದಿದ್ದರೂ ಹೋಂ ಐಸೋಲೇಷನ್ ನಲ್ಲಿರುವವರನ್ನು ಕೋವಿಡ್ ಕೇರ್ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ರವಾನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ 20 ನಗರ ಪ್ರದೇಶದಲ್ಲಿ ಕೊರೊನಾ ಹಾಟ್ಸ್ಪಾಟ್ ಆಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ 20 ಕೊರೊನಾ ಹಾಟ್ಸ್ಪಾಟ್ಗಳಿವೆ. ಮೈಸೂರಿನಲ್ಲಿ ಬನ್ನೂರು ಹಾಗೂ ಪಿರಿಯಾಪಟ್ಟಣ ಸೇರಿ ಒಟ್ಟು 3 ಕೊರೊನಾ ಹಾಟ್ ಸ್ಪಾಟ್ಗಳಿವೆ. ಈ ಪ್ರದೇಶಗಳಲ್ಲಿ ಕಂಟೈನ್ಮೆಂಟ್ ವಲಯದ ನಿಯಮಗಳನ್ನು ಕಠಿಣವಾಗಿ ಪಾಲನೆ ಮಾಡಬೇಕಿದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ